ಚಿಕ್ಕಮಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಿಸಾನ್ ಕಾಂಗ್ರೆಸ್ ಮತ್ತು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.

330

ಚಿಕ್ಕಮಗಳೂರು : ಪೆಟ್ರೋಲ್, ಡೀಸೆಲ್ ಮತ್ತು ದಿನಬಳಕೆ ವಸ್ತುಗಳ ಬೆಲೆ ಏರಿಕೆಯನ್ನು ವಿರೋಧಿಸಿ ಕಿಸಾನ್ ಕಾಂಗ್ರೇಸ್ ಮತ್ತು ಬ್ಲಾಕ್ ಕಾಂಗ್ರೇಸ್ ಕಾರ್ಯಕರ್ತರು ತಾಲ್ಲೂಕಿನ ಆಲ್ದೂರಿನಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಅಂಬೇಡ್ಕರ್ ವೃತ್ತದಿಂದ ಬೆಲೆ ಏರಿಕೆ ತಡೆಗಟ್ಟಿ ಜನಸಾಮಾನ್ಯರನ್ನು ಉಳಿಸಿ ಭಿತ್ತಿಪತ್ರ ಮತ್ತು ಘೋಷಣೆಯೊಂದಿಗೆ ಮೆರವಣಿಗೆ ನಡೆಸಿದ ಕಾರ್ಯಕರ್ತರು ಬಸ್ ನಿಲ್ದಾಣ ಮುಂಭಾಗದ ವೃತ್ತದ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪತ್ರಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸವಿತಾ ರಮೇಶ್ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಸುವ ಮೂಲಕ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರು.
ಮನ್‍ಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾದಾಗ ಮಹಿಳೆಯರೊಂದಿಗೆ ಬೀದಿಯಲ್ಲಿ ಕುಳಿತು ಅಡುಗೆ ಮಾಡಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರು ಇದೀಗ ಅವರದೇ ಸರ್ಕಾರ ದಿನೇದಿನೇ ಬೆಲೆ ಹೆಚ್ಚಳ ಮಾಡುತ್ತಿದ್ದರೂ ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.
ಬಹುರಾಷ್ಟ್ರೀಯ ಕಂಪನಿಗಳು ಮತ್ತು ಉದ್ಯಮಗಳೊಂದಿಗೆ ಶಾಮೀಲಾಗಿರುವ ಕೇಂದ್ರ ಸರ್ಕಾರ ಅನ್ನದಾತರನ್ನು ಬೀದಿಗೆ ತಳ್ಳುತ್ತಿದೆ, ರೈತರ ಭೂಮಿಯನ್ನು ಕಿತ್ತುಕೊಳ್ಳುತ್ತಿದೆ, ಇದರ ವಿರುದ್ದ ದೇಶದ ಜನತೆ ಎಚ್ಚೆತ್ತುಕೊಳ್ಳಬೇಕು ಎಂದು ಕರೆ ನೀಡಿದರು.
ಕಿಸಾನ್ ಕಾಂಗ್ರೇಸ್ ಜಿಲ್ಲಾ ಕಾರ್ಯಾಧ್ಯಕ್ಷ ಡಿ.ಎಂ.ವಿಜಯ್ ಮಾತನಾಡಿ ರೈತರ ಬದುಕಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ,ತೆರಿಗೆ ಮೇಲೆ ತೆರಿಗೆಗಳನ್ನು ಹಾಕುವ ಮೂಲಕ ಜನಸಾಮಾನ್ಯರು ಬದುಕದಂತೆ ಮಾಡುತ್ತಿದಾರೆ. ದೇಶದ ನೆಲ, ಜಲ ಸಂಪನ್ಮೂಲಗಳನ್ನು ಮಾರುತ್ತಿದ್ದಾರೆ ಎಂದು ದೂರಿದರು.
ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಡಾ ಅಂಶುಮತ್ ಮಾತನಾಡಿ ಕೇಂದ್ರ ಸರ್ಕಾರ ಸಂರ್ಪೂವಾಗಿ ರೈತರು ಮತ್ತು ಜನ ವಿರೋಧಿ ಸರ್ಕಾರವಾಗಿದ್ದು, ಅದರ ವಿರುದ್ದ ಜನಾಂದೋಲನ ನಡೆಯಬೇಕಾಗಿದೆ ಎಂದರು.
ಇಂದಿನ ಪ್ರತಿಭಟನೆ ಸಾಂಕೇತಿಕವಾಗಿದ್ದು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯ ವಿರುದ್ದ ಪ್ರತಿ ಗ್ರಾಮಗಳಲ್ಲೂ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.
ಕಿಸಾನ್ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಕೃಷ್ಣೇಗೌಡ ಮಾತನಾಡಿ ಜನವರೋಧಿ ಮತ್ತು ಶ್ರೀಮಂತರ ಪರವಾಗಿರುವ ಕೇಂದ್ರ ಸರ್ಕಾರದ ವಿರುದ್ದ ಜನ ಬೀದಿಗಿಳಿಯಬೇಕು ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಮುದಾಬಿರ್, ಜಿಲ್ಲಾ ಕಾಂಗ್ರೇಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಆಲ್ದೂರು ಹೋಬಳಿ ಕಾಂಗ್ರೇಸ್ ಅಧ್ಯಕ್ಷ ಸಿ.ಸಿ.ಈರೇಗೌಡ, ವಸ್ತಾರೆ ಹೋಬಳಿ ಅಧ್ಯಕ್ಷ ಪೂರ್ಣೇಶ್, ಅಂಬಳೆ ಹೋಬಳಿ ಅಧ್ಯಕ್ಷ ವಿಜಯ್, ಆಲ್ದೂರು ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸಿ.ಸುರೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.