ಮಂಗಳೂರು : ಆಟೋ ರಿಕ್ಷಾಕ್ಕೆ ಹಿಂದಿನಿಂದ ಕಾರೊಂದು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ -66ರ ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತ ವ್ಯಕ್ತಿಯನ್ನು ಪಜೀರು ನಿವಾಸಿ ಸಂಜೀವ ಪೂಜಾರಿ ಪುತ್ರ ಶ್ಯಾಮ್ ಪ್ರಸಾದ್ (45) ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾಕ್ಕೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಘಟನೆಗೆ ಕಾರು ಚಾಲಕನ ಅತಿ ವೇಗದ ಮತ್ತು ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಹೇಳಲಾಗಿದೆ. ಆಟೋ ಚಾಲಕನ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆ ಸಂಬಂಧ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










