ಬೆಂಗಳೂರು : ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗಿದೆ. ಸರ್ವಪಕ್ಷ ಸಭೆ ಬಳಿಕ ರಾಜ್ಯದಲ್ಲಿ ಸೋಂಕು ನಿಯಂತ್ರಣ, ಚಿಕಿತ್ಸೆ ವ್ಯವಸ್ಥೆ ಅಧ್ಯಯನ ಮಾಡಿ ಬಿಗಿ ನಿಯಮ ತರಲಾಗಿದೆ. ಈ ಮಾರ್ಗಸೂಚಿಯಲ್ಲಿ ಹದಿನಾಲ್ಕು ದಿನಗಳ ಕಾಲ ಕಠಿಣ ನಿಯಮ ಜಾರಿಗೆ ತರಲಾಗಿದೆ. ಕೊರೊನಾ ಚೈನ್ ಲಿಂಕ್ ಮುರಿಯಲು 14 ದಿನ ಬೇಕಾಗಿದೆ. ಹೀಗಾಗಿ 14 ದಿನ ಬಿಗಿಯಾದ ನಿಯಮಗಳ ಜಾರಿ ಮಾಡಲಾಗಿದ್ದು, ಜನ ಮಾರ್ಗಸೂಚಿಯನ್ನು ಪಾಲಿಸಬೇಕು ಎಂದು ಡಾ. ಸುಧಾಕರ್ ಅವರು ತಿಳಿಸಿದ್ದಾರೆ.
ಇನ್ನೂ ಕೊರೊನಾ ಸೋಂಕಿತರಿಗೆ ಸೂಕ್ತ ರೀತಿಯ ಚಿಕಿತ್ಸೆ ಕೊಡುವ ವ್ಯವಸ್ಥೆ ಮಾಡಲಾಗುತ್ತಿದ್ದು, ರೆಮೆಡಿಸಿವಿರ್, ಐಸಿಯು, ಆಕ್ಸಿಜನ್, ಬೆಡ್ ಲಭ್ಯತೆ ಹೆಚ್ಚು ಮಾಡಿಕೊಳ್ಳಲು ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಅಗತ್ಯವಿರುವ ಕಡೆ ಹೆಚ್ಚಿನ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುತ್ತೆ. ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿಯಾಗಿ ಕೆಲವು ವಿಶೇಷ ವೇತನ, ಜವಾಬ್ದಾರಿ ಕೊಡುತ್ತೇವೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಡಾ. ಸುಧಾಕರ್ ಅವರು ಮಾಹಿತಿ ನೀಡಿದರು.










