ಮುಂಬೈ : ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ.
61 ವರ್ಷದ ಛೋಟಾ ರಾಜನ್ ಅವರನ್ನು 2015ರಲ್ಲಿ ಇಂಡೋನೇಷ್ಯಾದ ಬಾಲಿ ಪೊಲೀಸರು ಭಾರತಕ್ಕೆ ಹಸ್ತಾಂತರಿಸಿದ್ದರು. ಅಂದಿನಿಂದ ರಾಜನ್ ಅವರು ತಿಹಾರ್ ಜೈಲಿನಲ್ಲಿದ್ದಾರೆ. ನಿನ್ನೆ ವಿಚಾರಣೆ ಹಿನ್ನೆಲೆ ವೀಡಿಯೋ ಕಾನ್ಫರೆನ್ಸ್ ನಲ್ಲಿ ಛೋಟಾ ರಾಜನ್ ನನ್ನು ಹಾಜರುಪಡಿಸಿರಲಿಲ್ಲ. ರಾಜನ್ ಅವರಿಗೆ ಕೊರೊನಾ ಸೋಂಕು ತಗುಲಿದ್ದರಿಂದ ವಿಚಾರಣೆಗೆ ಹಾಜರು ಪಡಿಸಿಲ್ಲ ಎಂದು ಜೈಲಿನ ಅಧಿಕಾರಿಗಳು ತಿಳಿಸಿದರು.
ಛೋಟಾ ರಾಜನ್ ಅವರು ಮುಂಬೈನಲ್ಲಿ ಕೊಲೆ ಮತ್ತು ಸುಲಿಗೆ ಸಂಬಂಧಿಸಿದಂತೆ 70ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. 2018 ರಲ್ಲಿ ಪತ್ರಕರ್ತ ಜ್ಯೋತಿರ್ಮಯಿ ಡೇ ಅವರ ಹತ್ಯೆ ಪ್ರಕರಣದಲ್ಲಿ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.










