ಮೈಸೂರು : ವರ್ಗಾವಣೆಯ ಬಗ್ಗೆ ನಿರೀಕ್ಷೆ ಮಾಡಿರಲಿಲ್ಲ. ಮಗಳು ತವರು ಮನೆ ಬಿಟ್ಟು ಹೋಗುತ್ತಿರುವಂತೆ ಅನುಭವವಾಗುತ್ತಿದೆ ಎಂದು ರೋಹಿಣಿ ಸಿಂಧೂರಿಯವರು ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರಿಗೆ ಬಂದಾಗ ತಾಯಿಯ ಮನೆಯ ಅನುಭವ ನೀಡಿದೆ. ಒಬ್ಬ ಮಗಳಾಗಿ ಮೈಸೂರಿನ ಎಲ್ಲಾ ಜನತೆಗೆ ಧನ್ಯವಾದ ಹೇಳುತ್ತೇನೆ. ವರ್ಗಾವಣೆ ಬಳಿಕ ಸಾಕಷ್ಟು ಜನ ತಮ್ಮ ಪ್ರೀತಿ ಮತ್ತು ಅಭಿಮಾನಗಳನ್ನು ವ್ಯಕ್ತಪಡಿಸಿದ್ದಾರೆ. ಉತ್ತಮ ಕೆಲಸ ಮಾಡುವ ಸಂದರ್ಭದಲ್ಲಿ ಈ ರೀತಿಯಾಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇಂದು ಹೊಸ ಜಿಲ್ಲಾಧಿಕಾರಿಗೆ ಶುಭಾಶಯ ಹೇಳಲು ಬಂದಿದ್ದೇನೆ. ಮೈಸೂರಿನ ಎಲ್ಲಾ ವಿಷಯಗಳನ್ನು ವಸ್ತುನಿಷ್ಠವಾಗಿ ಹೇಳಿದ್ದೇನೆ. ನನಗೆ ತವರು ಮನೆಯನ್ನು ಬಿಟ್ಟು ಹೋಗುತ್ತಿರುವ ಅನುಭವವಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಏನು ನಡೆದಿದೆ ಎಂಬುದು ಎಲ್ಲರಿಗೆ ಗೊತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಅವರ ಹತಾಶೆ ಹಾಗೂ ಅಭದ್ರತೆ, ಒತ್ತಾಸೆಗೆ ಈ ರೀತಿ ಮಾತನಾಡೋದು ಸರಿಯಲ್ಲ. ಯಾವುದೋ ಅಧಿಕಾರಿಯನ್ನು ತೆಗೆಸಿ ಮಿಷನ್ ಮುಗಿಯಿತು ಎಂದು ಹೇಳುವುದು ತಪ್ಪು. ಈ ರೀತಿ ಯಾವ ಸಂಸ್ಥೆಯಲ್ಲಿ ಆದರೂ, ವ್ಯವಸ್ಥೆ ಸರಿಪಡಿಸಲು ಸಾಧ್ಯವಿಲ್ಲ ಎಂದರು.
ರೋಹಿಣಿ ಸಿಂಧೂರಿ ಅವರು ಭೂ ಮಾಫೀಯಾಗೆ ಬಲಿಯಾದರು ಎಂಬ ಮಾಧ್ಯಮಗಳ ಪ್ರಶ್ನೆಗೆ ನೋ ಕಮೆಂಟ್ ಎಂದು ಉತ್ತರಿಸಿದ ಸಿಂಧೂರಿ, ಥ್ಯಾಂಕ್ಯೂ ಮೈಸೂರು ಎಂದು ಹೇಳಿ ರೋಹಿಣಿ ಸಿಂಧೂರಿ ನಿರ್ಗಮಿಸಿದರು.
ವರ್ಗಾವಣೆ
ಇಬ್ಬರು ಮಹಿಳಾ ಐಎಎಸ್ ಅಧಿಕಾರಿಗಳ ಜಟಾಪಟಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು. ಇದೀಗ ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಶಿಲ್ಪಾ ನಾಗ್ ಅವರನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಇ-ಗವರ್ನೆನ್ಸ್ ನಿರ್ದೇಶಕರನ್ನಾಗಿ ಮಾಡಿ ಆದೇಶ ಹೊರಡಿಸಲಾಗಿದೆ.
ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ಬಗಾದಿ ಗೌತಮ್ ಅವರನ್ನು ಮೈಸೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾವಣೆಗೊಳಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಎಂಡಿ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ಮೈಸೂರು ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ವರ್ಗಾವಣೆಗೊಳಿಸಲಾಗಿದೆ.










