ಬೆಂಗಳೂರು : ‘100 ನಾಟ್ ಔಟ್’ ಘೋಷಣೆ ಅಡಿ ರಾಜ್ಯಾದ್ಯಂತ ಇಂದಿನಿಂದ ಐದು ದಿನಗಳ ಕಾಲ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ರಾಜ್ಯ ನಾಯಕರು ಇಂದು ಮೊದಲ ದಿನ ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಗಾಂಧಿನಗರ ವಿಧಾನಸಭಾ ಕ್ಷೇತ್ರದ ಶೇಷಾದ್ರಿಪುರಂನ ಶಿವಾನಂದ ಸರ್ಕಲ್ ಸಮೀಪದ ರೆಡ್ಡಿ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಆರ್.ವಿ.ದೇಶಪಾಂಡೆ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆ ವೇಳೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಮುಂತಾದವರನ್ನು ವಶಕ್ಕೆ ಪಡೆದ ಪೊಲೀಸರು ರೆಡ್ಡಿ ಪೆಟ್ರೋಲ್ ಬಂಕ್ ನಿಂದ ಹೈಗ್ರೌಂಡ್ಸ್ ಠಾಣೆಗೆ ಕರೆದೊಯ್ದು ಆನಂತರ ಬಿಡುಗಡೆ ಮಾಡಿದರು.










