ಹಾವೇರಿ : ಆ.23 ರಂದು ಕಾಲೇಜಿಗೆ ಹೋಗಿದ್ದ ಕವಿತಾ ಎಂಬ ಯುವತಿ ಅದೇ ದಿನ ಸಂಜೆ ಅನುಮಾನಾಸ್ಪದವಾಗಿ ಶಿಗ್ಗಾಂವಿ ಸಮೀಪದ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಕವಿತಾಳ ಕಿವಿಯಲ್ಲಿ ರಕ್ತ ಬಂದಿದ್ದು ಬಿಟ್ಟರೆ ದೇಹದಲ್ಲಿ ಹೇಳಿಕೊಳ್ಳುವಂತಹ ಗಾಯಗಳು ಪತ್ತೆಯಾಗಿಲ್ಲ ಎನ್ನಲಾಗುತ್ತಿದೆ.
ಇದರ ಬೆನ್ನಲ್ಲೆ ಈ ಪ್ರಕರಣವನ್ನು ಶಿಗ್ಗಾಂವಿ ಪೊಲೀಸ್ ಠಾಣೆ ಅನುಮಾನಾಸ್ಪದ ಸಾವು ಎಂದು ದಾಖಲಿಸಿಕೊಳ್ಳಲಾಗಿದೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದು, ಅಧಿಕಾರಿಗಳ ತಂಡ ರಚಿಸಿ ತನಿಖೆ ಚುರುಕುಗೊಳಿಸಿದೆ. ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ಕೈಗೊಂಡಿರುವ ಪೊಲೀಸರಿಗೆ ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದು ತಿಳಿಯುತ್ತಿಲ್ಲ. ಕವಿತಾ ಸಾವು ಪ್ರಕರಣ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದೆ. ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಎಬಿವಿಪಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ವಿದ್ಯಾರ್ಥಿನಿ ಸಾವಿನ ಕುರಿತು ಸಮಗ್ರ ತನಿಖೆ ನಡೆಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ.
ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಶೀಲವಂತ ಸೋಮಾಪುರದ ಕವಿತಾ ಶಿಗ್ಗಾಂವಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ದ್ವಿತೀಯ ವರ್ಷದಲ್ಲಿ ಓದುತ್ತಿದ್ದರು.










