ಬೆಂಗಳೂರು : ಇಂದಿನಿಂದ ಹತ್ತುದಿನಗಳ ಕಾಲ ಮಳೆಗಾಲದ ಅಧಿವೇಶನ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದ ಮೊದಲ ಅಧಿವೇಶನ ದಿನವೇ ತೈಲ ಹಾಗೂ ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ಎತ್ತಿನಗಾಡಿ ಚಲೋ ಪ್ರತಿಭಟನೆ ನಡೆಸುತ್ತಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ನಗರದ ಶಿವಾನಂದ ಸರ್ಕಲ್ ನ ಸರ್ಕಾರಿ ನಿವಾಸದಿಂದ ಸಿದ್ದರಾಮಯ್ಯ ಹಾಗೂ ಸದಾಶಿವನಗರ ನಿವಾಸದಿಂದ ಡಿ.ಕೆ.ಶಿವಕುಮಾರ್ ಪ್ರತಿಭಟನೆ ಆರಂಭಗೊಂಡಿದೆ. ಎತ್ತಿನಗಾಡಿ ಮೂಲಕವೇ ವಿಧಾನಸೌಧಕ್ಕೆ ತೆರಳಲಿದ್ದಾರೆ.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ತೈಲ ಬೆಲೆ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗುತ್ತಿದೆ. ಈ ಸರ್ಕಾರಕ್ಕೆ ಕಣ್ಣು, ಕಿವಿ ಇಲ್ಲ. ಈ ಸರ್ಕಾರ ದರ ಕೆಳಗಿಳಿಸುವವರೆಗೂ ನಾವು ಹೋರಾಟ ಮುಂದುವರಿಸುತ್ತೇವೆ. ಬೆಲೆ ಏರಿಕೆ ಬಗ್ಗೆ ಸದನದೊಳಗೂ ಚರ್ಚೆ ಮಾಡುತ್ತೇವೆ. ನಮ್ಮ ಹೋರಾಟವು ಬಿಜೆಪಿ ಹಾಗೂ ಸರ್ಕಾರಕ್ಕೆ ತಟ್ಟಲಿದೆ ಎಂದು ಹೇಳಿದರು.










