ಉಡುಪಿ: ಉಡುಪಿ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಅಧಿಕಾರಿಗಳೊಂದಿಗೆ ಶಾಸಕ ರಘುಪತಿ ಭಟ್ ನೇತೃತ್ವದ ಪರ್ಯಾಯೋತ್ಸವ ಸಮಿತಿ ಸಭೆ ನಡೆಯಿತು.
ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವುದರಿಂದ ಪರ್ಯಾಯೋತ್ಸವವನ್ನು ಸರಳವಾಗಿ ನಡೆಸುವ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪರ್ಯಾಯಕ್ಕೆ ಸಜ್ಜುಗೊಂಡ ಎಲ್ಲ ಟ್ಯಾಬ್ಲೋಗಳನ್ನು ರದ್ದುಪಡಿಸಿ ಸಂಪ್ರದಾಯಕ್ಕೆ ಒತ್ತುಕೊಟ್ಟು ಪರ್ಯಾಯ ನಡೆಸುವುದಾಗಿ ತೀರ್ಮಾನಿಸಲಾಗಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ನವೀನ್ ಭಟ್ ವೈ, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಹಾಗೂ ಪರ್ಯಾಯೋತ್ಸವ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ದ್ವೈವಾರ್ಷಿಕ ಪರ್ಯಾಯ ಮಹೋತ್ಸವದ ಧಾರ್ಮಿಕ, ಸಾಂಪ್ರದಾಯಿಕ ಕಾರ್ಯಕ್ರಮಗಳು ಇಂದು ಸಂಜೆಯಿಂದ ಆರಂಭವಾಗಿ ನಾಳೆವರೆಗೆ ನಡೆಯಲಿದೆ. ಆದರೆ, ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಈ ಬಾರಿ ಸರಳವಾಗಿ ಪರ್ಯಾಯೋತ್ಸವ ಆಚರಣೆ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. 251ನೇ ಪರ್ಯಾಯ ಮಹೋತ್ಸವ ಈ ಬಾರಿ ನಡೆಯುತ್ತಿದ್ದು, ಕೃಷ್ಣಾಪುರ ಮಠದ ವಿದ್ಯಾಸಾಗರತೀರ್ಥರು ಸರ್ವಜ್ಞ ಪೀಠಾರೋಹಣ ಮಾಡಲಿದ್ದಾರೆ.
ಕೊರೋನಾ ವೈರಸ್ ವ್ಯಾಪಕವಾಗಿ ಹೆಚ್ಚುತ್ತಿರುವುದರಿಂದ ಭಕ್ತಾದಿಗಳು ಪರ್ಯಾಯ ಮಹೋತ್ಸವವನ್ನು ದೂರದರ್ಶನದಲ್ಲಿ ನೇರಪ್ರಸಾರದ ಮೂಲಕ ವೀಕ್ಷಿಸಿ ಕೋರೋನಾ ನಿಯಂತ್ರಣಕ್ಕೆ ಸಹಕರಿಸಬೇಕಾಗಿ ಶಾಸಕ ರಘುಪತಿ ಭಟ್ ವಿನಂತಿ ಮಾಡಿದ್ದಾರೆ.










