ಅಮರಾವತಿ : ರೈಲು ಡಿಕ್ಕಿ ಹೊಡೆದ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರ ಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದ ಬಳಿ ನಿನ್ನೆ ತಡರಾತ್ರಿ ಈ ಅವಘಡ ಸಂಭವಿಸಿದೆ.
ಕೊಯಮತ್ತೂರಿನಿಂದ ಸಿಲ್ಚರ್ ಗೆ ಹೊರಟಿದ್ದ ಗುವಾಹಟಿ ಎಕ್ಸ್ ಪ್ರೆಸ್ ನ ಬೋಗಿಯಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ಪ್ರಯಾಣಿಕರು ಚೈನ್ ಎಳೆದು ರೈಲನ್ನು ನಿಲ್ಲಿಸಿದ್ದರು. ಬಳಿಕ ಕೆಲವರು ಕೆಳಗಿಳಿದು ಪಕ್ಕದ ಹಳಿಗಳ ಮೇಲೆ ನಿಂತಿದ್ದಾರೆ. ಈ ವೇಳೆ ಭುವನೇಶ್ವರದಿಂದ ವಿಶಾಖಪಟ್ಟಣಂ ಕಡೆಗೆ ವೇಗವಾಗಿ ಬಂದ ಕೋನಾರ್ಕ್ ಎಕ್ಸ್ ಪ್ರೆಸ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಸಾವನ್ನಪ್ಪಿರುವವರ ಪೈಕಿ ಇಬ್ಬರು ಅಸ್ಸಾಂ ಮೂಲದವರೆಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂಗೆ ರವಾನಿಸಲಾಗಿದೆ. ಸುದ್ದಿ ತಿಳಿದಾಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.










