ಮುಂದಿನ 75 ದಿನಗಳಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಬೂಸ್ಟರ್ ಡೋಸ್ ಗುರಿ : ಸಚಿವ ಸುಧಾಕರ್.

66
firstsuddi

ಬೆಂಗಳೂರು : ಆರೋಗ್ಯ ಇಲಾಖೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು ಆಯೋಜಿಸಿದ್ದ ಲಸಿಕಾಕರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‍ಅವರು, ಕೋವಿಡ್ ನಿರ್ವಹಣೆಯಲ್ಲಿ ಸರ್ಕಾರ ಉತ್ತಮ ಸಾಧನೆ ಮಾಡಿದ್ದು, ಮುಂದಿನ 75 ದಿನಗಳಲ್ಲಿ ನಾಲ್ಕೂವರೆ ಕೋಟಿ ಜನರಿಗೆ ಉಚಿತ ಬೂಸ್ಟರ್ ಡೋಸ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕ ಶೇ.100ಕ್ಕೂ ಅಧಿಕ ಪ್ರಮಾಣದಲ್ಲಿ ಎರಡೂ ಡೋಸ್ ಲಸಿಕೆ ನೀಡಿದೆ. 3ನೇ ಡೋಸ್ ಅನ್ನು ಕೂಡ ಮುಂದಿನ 75 ದಿನಗಳಲ್ಲಿ ರಾಜ್ಯದ 18 ರಿಂದ 59 ವಯೋಮಿತಿಯ ನಾಲ್ಕೂವರೆ ಕೋಟಿ ಜನರಿಗೆ ಕೊಡಬೇಕು ಎನ್ನುವ ಗುರಿ ಇದೆ. ಈ ಗುರಿ ತಲುಪಲು ಪೂರಕ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದೇವೆ. ರಾಜ್ಯದ ವಿವಿಧೆಡೆ ಏಳೂವರೆ ಸಾವಿರ ಸರ್ಕಾರಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜನರು ಇದರ ಸಂಪೂರ್ಣ ಲಾಭ ಪಡೆಯಬೇಕು. ಮೋದಿ ಸರ್ಕಾರವು ಇಡೀ ದೇಶಕ್ಕೆ ಕೊರೊನಾ ಲಸಿಕೆಯ 2 ಡೋಸ್ ಗಳನ್ನು ಉಚಿತವಾಗಿ ನೀಡಿದೆ. ಶುಕ್ರವಾರದಿಂದ ಬೂಸ್ಟರ್ ಡೋಸ್ ಅನ್ನು ಕೂಡ ಉಚಿತವಾಗಿ ನೀಡುವ ಕಾರ್ಯಕ್ರಮ ಆರಂಭವಾಗಿದೆ. ಈ ರೀತಿ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಆಚರಣೆ ಮಾಡಲಾಗುತ್ತಿದೆ. ಇದಕ್ಕೆ ಪೂರಕವಾಗಿ ರಾಜ್ಯದ 75 ವಿವಿಧ ಕ್ಷೇತ್ರಗಳಲ್ಲಿ ಲಸಿಕಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಅಮೃತಹಸ್ತದಿಂದ ಏಕಕಾಲಕ್ಕೆ ಆರಂಭ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಇತ್ತೀಚೆಗೆ ಅನೇಕರಿಗೆ ಕೋವಿಡ್ ಬಂದರೆ ಏನಾಗುತ್ತದೆ ಅನ್ನುವ ಉದಾಸೀನತೆ ಇದೆ. 2 ಡೋಸ್ ಲಸಿಕೆ ತೆಗೆದುಕೊಂಡು 6 ತಿಂಗಳುಗಳ ಮೇಲಾಗಿದೆ. ಇನ್ನೂ ಕೆಲವರು 2ನೇ ಡೋಸ್ ತೆಗೆದುಕೊಂಡು 1 ವರ್ಷದ ಮೇಲಾಗಿದೆ. ಇಂತಹವರಿಗೆ ಅಪಾಯ ಇರುತ್ತದೆ. ಹೀಗಾಗಿ ಲಸಿಕಾಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲು ವಿಶ್ವ ಆರೋಗ್ಯ ಸಂಸ್ಥೆ ಸೂಚನೆ ನೀಡಿದೆ. ಇಲ್ಲಿಯ ತನಕ ಕೋವಿಡ್ ವಿರುದ್ಧ ಯಶಸ್ವಿಯಾಗಿ ಹೋರಾಟ ಮಾಡಲು ಲಸಿಕಾಕರಣದ ವೇಗವೇ ಕಾರಣವಾಗಿದೆ. ಹೀಗಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಮುತುವರ್ಜಿ ವಹಿಸಿದ್ದಾರೆ. ಶೀಘ್ರದಲ್ಲಿ ರಾಜ್ಯದಲ್ಲಿ 470 ಕಡೆಗಳಲ್ಲಿ ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಮುಂದಿನ ಮೂರು ತಿಂಗಳ ಒಳಗೆ ಈ ಕ್ಲಿನಿಕ್ಗಳು ಆರಂಭವಾಗಲಿವೆ. ರಾಜಧಾನಿ ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್ ಆರಂಭವಾಗಲಿದೆ. ಜು. 28ಕ್ಕೆ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿ ಮೊದಲ ಕ್ಲಿನಿಕ್ ಆರಂಭಿಸಲು ಹಗಲಿರುಳು ಶ್ರಮಿಸಲಾಗುತ್ತಿದೆ. ಯಾವ ದೇಶದಲ್ಲೂ ಕೊರೊನಾ ಲಸಿಕೆಯನ್ನು ಉಚಿತ ನೀಡಿಲ್ಲ. ವಿದೇಶದಲ್ಲಿ ಕೊರೊನಾ ಪರೀಕ್ಷೆ ಮಾಡಲು ಕೂಡ 10,000 ರೂ. ಕೊಡಬೇಕು. ಆದರೆ 133 ಕೋಟಿ ಜನರಿರುವ ದೇಶದಲ್ಲಿ ಕೊರೊನಾ ಟೆಸ್ಟ್, ಲಸಿಕೆ ಎಲ್ಲವೂ ಉಚಿತ. ಕೊರೊನಾ ನಿಯಂತ್ರಣ ಮಾಡುವಲ್ಲಿ ಪ್ರಧಾನಿ ಹಾಗೂ ಕೇಂದ್ರ ಸರ್ಕಾರದ ಕೊಡುಗೆ ದೊಡ್ಡದು ಎಂದು ಹೇಳಿದರು.