ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಹರ್ಮನ್ ಪ್ರದೇಶದಲ್ಲಿ ಉಗ್ರರು ಗ್ರೆನೇಡ್ ಎಸೆದು ಇಬ್ಬರು ವಲಸೆ ಕಾರ್ಮಿಕರನ್ನು ಹತ್ಯೆ ಮಾಡಿದ್ದಾರೆ.
ಮೃತರನ್ನು ಮನೀಶ್ ಕುಮಾರ್ ಹಾಗೂ ರಾಮ್ ಸಾಗರ್ ಎಂದು ಗುರುತಿಸಲಾಗಿದೆ. ಮೃತರು ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನಿವಾಸಿಗಳಾಗಿದ್ದು, ಜಮ್ಮು ಕಾಶ್ಮೀರಕ್ಕೆ ಕೆಲಸಕ್ಕೆಂದು ಬಂದಿದ್ದರು. ಇಂದು ಬೆಳಗ್ಗಿನ ಜಾವ ನಿದ್ದೆಯಲ್ಲಿದ್ದಾಗ ಅವರ ಮೇಲೆ ಉಗ್ರರು ಗ್ರೆನೇಡ್ ಎಸೆದಿದ್ದಾರೆ.
ಸ್ಫೋಟದಲ್ಲಿ ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿ ಉಗ್ರ ಸಂಘಟನೆಯ ಹೈಬ್ರಿಡ್ ಉಗ್ರ ಇಮ್ರಾನ್ ಬಶೀರ್ ಗನಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಕಾಶ್ಮೀರದ ಎಡಿಜಿಪಿ ತಿಳಿಸಿದ್ದಾರೆ.
ಅ.15ರಂದು ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಚೌಧರಿ ಗುಂಡ್ ಎಂಬಲ್ಲಿ ಪುರನ್ ಕ್ರಿಶನ್ ಭಟ್ ಎಂಬ ಕಾಶ್ಮೀರಿ ಪಂಡಿತನ ಮೇಲೆ ಗುಂಡಿನ ದಾಳಿ ನಡೆದಿತ್ತು.










