ನವದೆಹಲಿ : ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅಫ್ತಾಬ್ ನನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ದೆಹಲಿಯ ಸಾಕೇತ್ ಕೋರ್ಟ್ ಅನುಮತಿ ನೀಡಿದೆ.
ಪ್ರಕರಣದಲ್ಲಿ ಅಫ್ತಾಬ್ ಕೆಲವು ಸಂಗತಿಗಳನ್ನು ಮುಚ್ಚಿಡುತ್ತಿರುವ ಅನುಮಾನಗಳು ಪೊಲೀಸರಿಗೆ ವ್ಯಕ್ತವಾಗಿದೆ. ಈ ಹಿನ್ನೆಲೆ ನಿಖರ ಮಾಹಿತಿ ಪಡೆಯುವ ಉದ್ದೇಶದಿಂದ ಮಂಪರು ಪರೀಕ್ಷೆಗೆ ಅನುಮತಿ ಕೋರಿ ದೆಹಲಿ ಪೊಲೀಸರು ಕೋರ್ಟ್ ಗೆ ಮನವಿ ಮಾಡಿದ್ದರು. ಈ ಪರೀಕ್ಷೆಯು ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಸ್ವೀಕಾರಾರ್ಹವಲ್ಲದಿದ್ದರೂ ಸಾಕ್ಷಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಪರೀಕ್ಷೆ ಅಗತ್ಯ ಎನ್ನಲಾಗುತ್ತಿದೆ.
28 ವರ್ಷದ ಅಫ್ತಾಬ್ ಪೂನಾವಾಲಾ ಮೇ ತಿಂಗಳಲ್ಲಿ ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಕೊಂದಿದ್ದ. ಅಷ್ಟೇ ಅಲ್ಲದೇ ಶ್ರದ್ಧಾಳನ್ನು ಕೊಂದ ಬಳಿಕ ಅಫ್ತಾಬ್ ಆಕೆಯ ದೇಹದ ಭಾಗಗಳನ್ನು 35 ಭಾಗ ಮಾಡಿ, ಫ್ರಿಡ್ಜ್ನಲ್ಲಿ ಇರಿಸಿದ್ದ. ನಂತರ 18 ದಿನಗಳ ಕಾಲ ದೆಹಲಿ ಮತ್ತು ಸುತ್ತಮುತ್ತಲಿನ ವಿವಿಧ ಸ್ಥಳಗಳಲ್ಲಿ ಆಕೆಯ ದೇಹದ ಭಾಗಗಳನ್ನು ಬಿಸಾಡಿ ಬರುತ್ತಿದ್ದ. ಈ ಹತ್ಯೆಯು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ.










