ಜಕಾರ್ತ : ಇಂಡೋನೇಷ್ಯಾದ ಜಾವಾ ದ್ವೀಪದಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 162 ಮಂದಿ ಮೃತಪಟ್ಟಿದ್ದು, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. 5.6 ರಷ್ಟು ತೀತ್ರತೆಯಲ್ಲಿ ಭೂಕಂಪ ಸಂಭವಿಸಿರುವುದಾಗಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಆದರೆ ಇದೀಗ ಭೂಕಂಪದ ತೀವ್ರತೆ 6.9ಕ್ಕೆ ತಲುಪಿದೆ.
ಮಕ್ಕಳು ಸೇರಿ ಗಾಯಾಳುಗಳಿಗೆ ಆಸ್ಪತ್ರೆಗಳ ಒಳಗೆ, ಹೊರಗೆ, ಟೆರೆಸ್, ಪಾರ್ಕಿಂಗ್ ಸ್ಥಳಗಳಲ್ಲಿ ಚಿಕಿತ್ಸೆ ನೀಡಲಾಯಿತು. ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ರಾಜಧಾನಿ ಜಕಾರ್ತದಿಂದ 75 ಕಿ.ಮೀ ದೂರದ ಪಶ್ಚಿಮ ಜಾವಾ ಪ್ರಾಂತ್ಯದ ಸಿಯಾಂಜುರ್ ಪ್ರದೇಶದ 10 ಕಿಲೋ ಮೀಟರ್ (6.2 ಮೈಲಿ) ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಲವು ಮನೆ, ಕಟ್ಟಡಗಳು ಕುಸಿದು ಬಿದ್ದಿವೆ. ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ದವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಜೆದಿಲ್ ಹಳ್ಳಿಯೊಂದರಲ್ಲೇ ಸುಮಾರು 25ಕ್ಕೂ ಹೆಚ್ಚು ಜನರು ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು, ಕುಸಿದ ಮನೆಗಳ ಅವಶೇಷಗಳಲ್ಲಿ ಹೂತು ಹೋಗಿರುವವರ ಹುಡುಕಾಟ ನಡೆಸಿದ್ದಾರೆ. ರಕ್ಷಣಾ ಕಾರ್ಯ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚು ಕಟ್ಟಡಗಳು ಕುಸಿದಿದ್ದು, ಹಲವರು ಗಾಯಗೊಂಡಿದ್ದಾರೆ. ಸಾವು-ನೋವು ಮತ್ತು ಹಾನಿಯ ಪ್ರಮಾಣದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ಮುಖ್ಯಸ್ಥ ಸುಹಾರ್ಯಾಂಟೊ ತಿಳಿಸಿದ್ದಾರೆ.










