ಗಾಂಧಿನಗರ : ಗುಜರಾತ್ ನಲ್ಲಿ ಬಹುಮತ ಪಡೆದ ಹಿನ್ನೆಲೆ ಇಂದು ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರಾಗಿ ಭೂಪೇಂದ್ರ ಪಟೇಲ್ ಅವರನ್ನು ಮರು ಆಯ್ಕೆ ಮಾಡಲಾಗಿದೆ. ಈ ಮೂಲಕ ಅವರು 2ನೇ ಬಾರಿಗೆ ಸಿಎಂ ಆಗಿ ಮುಂದುವರಿಯಲಿದ್ದಾರೆ.
ಅಹಮದಾಬಾದ್ ಜಿಲ್ಲೆಯ ಘಟ್ಲೋಡಿಯಾ ವಿಧಾನಸಭಾ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಆಯ್ಕೆಯಾಗಿರುವ ಭೂಪೇಂದ್ರ ಪಟೇಲ್ 1.92 ಮತಗಳಿಂದ ಈ ಬಾರಿ ಗೆಲುವು ಸಾಧಿಸಿದ್ದರು. ಪಕ್ಷ ಚುನಾವಣೆಗೂ ಮುನ್ನವೇ ಭೂಪೇಂದ್ರ ಅವರನ್ನು ಸಿಎಂ ಅಭ್ಯರ್ಥಿ ಎಂದು ಘೋಷಿಸಿತ್ತು. ಇಂದಿನ ಸಭೆಯಲ್ಲಿ ಔಪಚಾರಿಕವಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು.
ಭೂಪೇಂದ್ರ ಪಟೇಲ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿ ಹಲವು ನಾಯಕರು ಭಾಗಿಯಾಗಲಿದ್ದಾರೆ.










