ಹುಬ್ಬಳ್ಳಿ: ಇಂದಿನಿಂದ ನಾಲ್ಕು ದಿನಗಳ ಕಾಲ ಹುಬ್ಬಳ್ಳಿ ಧಾರವಾಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ 26 ನೇ ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.
ಸ್ವಾಮಿ ವಿವೇಕಾನಂದರ ಜಯಂತಿ ನಿಮಿತ್ತ ಧಾರವಾಡದಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಗೆಂದು ಆಗಮಿಸಿಸೋ ನಮೋ ಸ್ವಾಗತಕ್ಕೆ ಧಾರವಾಡ ಜಿಲ್ಲೆ ಸಕಲ ರೀತಿಯಲ್ಲಿ ಸಜ್ಜಾಗಿದೆ. ಇಂದಿನಿಂದ 4 ದಿನಗಳ ಕಾಲ ನಡೆಯುವ ಯುವ ಜನೋತ್ಸವಕ್ಕೆ ಇಂದು ಸಂಜೆ 4 ಗಂಟೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಕಾರ್ಯಕ್ರಮಕ್ಕಾಗಿ ರೈಲ್ವೆ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, 30 ಸಾವಿರ ಜನಕ್ಕೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.
ಬಳಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೋದಿ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್, ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್ ಜೋಶಿ, ಸೇರಿ ಹಲವರು ಭಾಗಿಯಾಗಲಿದ್ದಾರೆ.
ಮೋದಿ ಆಗಮನದಿಂದಾಗಿ ನಗರದ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಮೋದಿ ಸಾಗುವ ಹಾದಿಯಲ್ಲಿ ಸಾರ್ವಜನಿಕ ಸಂಚಾರ ನಿಷೇಧಿಸಲಾಗಿದೆ. ಮಧ್ಯಾಹ್ನ 1 ಗಂಟೆಯಿಂದ ಸಂಜೆ 7 ಗಂಟೆಯವರಿಗೆ ನಿರ್ಬಂಧವಿದೆ. ಬೆಳಗ್ಗೆಯಿಂದಲೇ ಹೊರಗಿನಿಂದ ನಗರಕ್ಕೆ ಬರುವ ವಾಹನಗಳಿಗೆ ಆಯಾಯಾ ರಸ್ತೆಗಳ ಪಕ್ಕದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಮಧ್ಯಾಹ್ನ 3.40ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಸ್ವಾಗತ ನೀಡಲಿದ್ದಾರೆ. 3.45 ರಿಂದ 4 ಗಂಟೆ ವರೆಗೂ 15 ನಿಮಿಷ ರೋಡ್ ಶೋ ಮಾಡಲಿದ್ದಾರೆ. 4 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದ್ದು, 5.15 ಕಾರ್ಯಕ್ರಮ ಮುಕ್ತಾಯವಾಗಲಿದೆ. 5.35ಕ್ಕೆ ದೆಹಲಿಯತ್ತ ಪ್ರಧಾನಿ ಮೋದಿ ಪ್ರಯಾಣಿಸಲಿದ್ದಾರೆ.










