ಚಿಕ್ಕಮಗಳೂರು: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಶಿಸ್ತು ಮತ್ತು ಶ್ರದ್ಧೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಶೃಂಗೇರಿ ಶಾಖಾ ಮಠದ ಶ್ರೀ ಗುಣನಾಥ ಸ್ವಾಮೀಜಿ ಸಲಹೆ ಮಾಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ನಿಟ್ಟಿನಲ್ಲಿ ನಗರದ ಬಿಜಿಎಸ್ ಪಿ.ಯು.ಕಾಲೇಜು, ಎಐಟಿ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ‘ಯಶಸ್ಸಿನತ್ಥ ಹೆಜ್ಜೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ವಿದ್ಯಾರ್ಥಿ ಬದುಕಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಉನ್ನತವಾದ ಗುರಿಯನ್ನು ಹೊಂದಿರಬೇಕು. ಶ್ರದ್ದೆ ಮತ್ತು ಪರಿಶ್ರಮದಿಂದ ವಿದ್ಯಾರ್ಜನೆ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಶ್ರದ್ಧೆ, ಶಿಸ್ತು ಮತ್ತು ಪರಿಶ್ರಮವಿಲ್ಲದಿದ್ದರೆ ಎಂತಹ ದೊಡ್ಡ ದೊಡ್ಡ ಕಾಲೇಜುಗಳಿಗೆ ಸೇರಿದರೂ ಉಪಯೋಗವಾಗುವುದಿಲ್ಲ. ಅಲ್ಲೂ ಸಹ ಶ್ರದ್ಧೆಯಿಂದ ಓದಿದರೆ ಮಾತ್ರ. ಗುರಿ ಸಾಧಿಸಲು ಸಾಧ್ಯವಾಗುತ್ತದೆ ಎಂದರು.
ಎಲ್ಲವನ್ನೂ ಎದುರಿಸಿ ಬದುಕುವುದೇ ಬದುಕು, ಜೀವನದಲ್ಲಿ ಬದುಕಿನಲ್ಲಿ ಯಾವುದಕ್ಕೂ ಅಂಜಬಾರದು, ಹಿಂಜರಿಕೆ ಮತ್ತು ಕೀಳರಿಮೆ ತೋರಬಾರದು, ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಹೆತ್ತವರನ್ನು ಪ್ರೀತಿಯಿಂದ ನೋಡಿಕೊಳ್ಳಬೇಕು. ಗುರು ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕು ಎಂದು ತಿಳಿ ಹೇಳಿದರು.
ಡಿ.ವೈ.ಎಸ್.ಪಿ.ಎನ್. ಪುರುಷೋತ್ತಮ್ ಮಾತನಾಡಿ, ವಿದ್ಯಾರ್ಥಿಗಳು ಬದುಕಿನಲ್ಲಿ ಗುರಿ ಸಾಧಿಸಬೇಕಾದರೆ ಯಾವುದೇ ಆಕರ್ಷಣೆಗಳಿಗೂ ಬಲಿಯಾಗಬಾರದು. ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಸಲಹೆ ಮಾಡಿದರು.
ಎಐಟಿ ಪ್ರಾಂಶುಪಾಲ ಡಾ.ಸಿ.ಟಿ.ಜಯದೇವ ಮಾತನಾಡಿ, ವಿದ್ಯಾರ್ಥಿಗಳು ಧೈರ್ಯ ಮತ್ತು ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ವಿಯಾಗಬಹುದು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜಿಎಸ್ ಪಿ.ಯು. ಕಾಲೇಜಿನ ಪ್ರಾಂಶುಪಾಲ ಜೆ.ಜಿ. ಸುರೇಂದ್ರ, ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಿ ಅವರಲ್ಲಿ ಆತ್ಮಸ್ಥೈರ್ಯವನ್ನು ತುಂಬುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ನೀಟ್ ಪರೀಕ್ಷೆಯಲ್ಲಿ 720ಕ್ಕೆ 675 ಅಂಕ ಹಾಗೂ ಸಿಇಟಿಯಲ್ಲಿ 1591ನೇ ರ್ಯಾಂಕ್ ಗಳಿಸಿದ ಬಿಜಿಎಸ್ ಪಿ.ಯು. ಕಾಲೇಜಿನ ವಿದ್ಯಾರ್ಥಿ ಕೆ.ಎಸ್. ಸಚಿನ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಕುರಿತು ಮಂಗಳೂರಿನ ಡಾ.ಪ್ರಶಾಂತ್ರಾವ್ ವಿದ್ಯಾರ್ಥಿಗಳಿಗೆ ವಿವರಿಸಿದರು. ಎ.ಐ.ಬಿ.ಎಂ ಕಾಲೇಜಿನ ಪ್ರಾಚಾರ್ಯ ಡಾ.ಪ್ರಕಾಶರಾವ್, ಕಡೂರು ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಎಸ್.ಆರ್. ಅಜ್ಜಯ್ಯ, ಮೂಡಿಗೆರೆ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ಸಂದೇಶ್ ಉಪಸ್ಥಿತರಿದ್ದರು.
ಚಿಕ್ಕಮಗಳೂರು, ಕಡೂರು ಮತ್ತು ಮೂಡಿಗೆರೆಯ ಬಿಜಿಎಸ್ ಪಿಯು ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.










