ಗದಗ: ಒಂಬತ್ತು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ಹಿಂಡು ದಾಳಿ ಮಾಡಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಹಿರೇಬಜಾರ್ ಬಡಾವಣೆಯಲ್ಲಿ ನಡೆದಿದೆ.
ಸರ್ಕಾರಿ ಪ್ರಾಥಮಿಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ಆದಿತ್ಯ ಹನುಮಂತಪ್ಪ ಪವಾರ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲೆಯಿಂದ ಮನೆಗೆ ವಾಪಸಾಗುತ್ತಿದ್ದ ವೇಳೆ ಏಕಾಏಕಿ ದಾಳಿ ಮಾಡಿರುವ ಬೀದಿನಾಯಿಗಳು, ಬಾಲಕನ ಕಾಲು ಬೆನ್ನಿನ ಭಾಗಕ್ಕೆ ಬಲವಾಗಿ ಕಚ್ಚಿ ಗಾಯಗೊಳಿಸಿವೆ. ಈ ವೇಳೆ ನಾಯಿಗಳು ಜೋರಾಗಿ ಬೋಗಳುತ್ತಿರುವ ಶಬ್ದ ಕೇಳಿ ಬಂದ ಸ್ಥಳೀಯರು, ತಕ್ಷಣ ಬೀದಿನಾಯಿಗಳ ಗುಂಪುನ್ನು ಓಡಿಸಿ ಬಾಲಕನ ರಕ್ಷಣೆ ಮಾಡಿದ್ದಾರೆ.
ಬಾಲಕರು ಮತ್ತು ವೃದ್ಧರು ಸೇರಿದಂತೆ ಜನರ ಮೇಲೆ ನಾಯಿಗಳ ಹಿಂಡು ದಾಳಿ ನಡೆಸುತ್ತಿದ್ದು, ಮುಖ್ಯರಸ್ತೆಯಲ್ಲೇ ಬೀದಿನಾಯಿಗಳು ಗುಂಪುಗುಂಪಾಗಿ ತಿರುಗಾಡುತ್ತಿದ್ದರೂ, ಯಾವುದೇ ಕ್ರಮ ಕೈಗೊಳ್ಳದ ಪುರಸಭೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.










