ಶಿವಮೊಗ್ಗ: ಭೀಮನ ಅಮಾವಾಸ್ಯೆಯ ದಿನವೇ ಪತಿಯೇ ಪತ್ನಿಯನ್ನು ಕಿಡ್ನಾಪ್ ಮಾಡಿರುವ ಘಟನೆ ಜಿಲ್ಲೆಯ ಬಸ್ ನಿಲ್ದಾಣದ ಬಳಿ ನಡೆದಿದೆ.
ಅಪಹರಣವಾದ ಗೃಹಿಣಿಯನ್ನು ದಿವ್ಯ (23) ಎಂದು ಗುರುತಿಸಲಾಗಿದೆ. ಶಿವಮೊಗ್ಗ ತಾಲೂಕಿನ ಗಾಜನೂರಿನ ರವಿ ಹಾಗೂ ಶಿವಮೊಗ್ಗದ ಹೊಸಮನೆ ಬಡಾವಣೆ ನಿವಾಸಿ ದಿವ್ಯ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರ ವಿರೋಧ ಇತ್ತು. ವಿರೋಧದ ನಡುವೆಯೂ ಇಬ್ಬರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಮಾಡಿಸಿ ಮದುವೆಯಾಗಿದ್ದರು. ಆದರೆ ಕಳೆದ ಕೆಲವು ದಿನಗಳ ಹಿಂದೆ ದಿವ್ಯಾಳನ್ನು ಆಕೆಯ ಪೋಷಕರು ಮನೆಗೆ ಕರೆದುಕೊಂಡು ಹೋಗಿದ್ದರು.
ಇಂದು ಬಸ್ ನಿಲ್ದಾಣದ ಬಳಿ ಯುವತಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬಂದ ಆಕೆಯ ಪತಿ ರವಿ ಹಾಗೂ ಆತನ ಸ್ನೇಹಿತರು ದಿವ್ಯಾಳನ್ನು ಅಪಹರಿಸಿಕೊಂಡು ಹೋಗಿದ್ದಾರೆ. ಅಪಹರಣದ ನಂತರ ಕುಟುಂಬಸ್ಥರ ರೋಧನೆ ಮುಗಿಲು ಮುಟ್ಟಿದೆ. ನಮ್ಮ ಮಗಳನ್ನು ಗಾಜನೂರಿನ ರವಿಯೇ ಅಪಹರಿಸಿಕೊಂಡು ಹೋಗಿದ್ದಾನೆ ಎಂದು ದಿವ್ಯ ಕುಟುಂಬಸ್ಥರು ಆರೋಪಿಸಿದ್ದಾರೆ.
ಘಟನೆ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










