ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಾರತೀಯ ಯೋಧರು ಹುತಾತ್ಮ…

63
firstsuddi

ಜಮ್ಮು ಮತ್ತು ಕಾಶ್ಮೀರ: ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯ ಕೋಕರ್‌ನಾಗ್ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಭಾರತೀಯ ಸೇನೆಯ ಯೋಧರು ಹುತಾತ್ಮರಾಗಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಪೊಲೀಸ್ ಉಪ ಅಧೀಕ್ಷಕ ಹುಮಾಯುನ್ ಭಟ್ ಪ್ರಾಣ ಕಳೆದುಕೊಂಡಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್ ಅವರು 19 ರಾಷ್ಟ್ರೀಯ ರೈಫಲ್ಸ್ (19 ಆರ್‌ಆರ್) ಘಟಕದ ಕಮಾಂಡಿಂಗ್ ಅಧಿಕಾರಿಯಾಗಿದ್ದರು. ರಾಷ್ಟ್ರೀಯ ರೈಫಲ್ಸ್ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಡಾಯ ನಿಗ್ರಹ ಪಡೆ ಆಗಿದೆ.

ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್, ಸೇನೆಯ 15 ಕಾರ್ಪ್ಸ್ ಕಮಾಂಡರ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೇರಿದಂತೆ ಉನ್ನತ ಅಧಿಕಾರಿಗಳು ಎನ್‌ಕೌಂಟರ್ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಮತ್ತು ಮೃತದೇಹಗಳ ತೆರವು ಕಾರ್ಯವನ್ನು ಮೇಲ್ವಿಚಾರಣೆ ಮಾಡಿದ್ದಾರೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಖಚಿತ ಮಾಹಿತಿ ಪಡೆದ ನಂತರ ನಿನ್ನೆ ತಡರಾತ್ರಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.