ಉಡುಪಿ: ಅಪರಿಚಿತನೊಬ್ಬ ಕಾರಿನಲ್ಲಿ ಬಂದು ಚೂರಿ ಇರಿದು ಪರಾರಿಯಾದ ಘಟನೆ ನಿನ್ನೆ ಸಂಜೆ ಜಿಲ್ಲೆಯ ಕುಂದಾಪುರ ತಾಲೂಕಿನ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಬಳಿ ನಡೆದಿದೆ.
ಚೂರಿ ಇರಿತಕ್ಕೊಳಗಾದವರನ್ನು ಕುಂದಾಪುರ ಮೂಲದ ರಾಘವೇಂದ್ರ (42) ಎಂದು ಗುರುತಿಸಲಾಗಿದ್ದು, ಗಂಭೀರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ರಾಘವೇಂದ್ರ ಅವರು ಕಾರಿನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿ ರಾಘವೇಂದ್ರ ಅವರ ಕಾರನ್ನು ಅಡ್ಡಗಟ್ಟಿ ತೊಡೆಗೆ ಚೂರಿ ಇರಿದು, ಕಾರಿನಲ್ಲಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಯಾವ ಕಾರಣಕ್ಕಾಗಿ ನಡೆದಿದೆ ಎಂಬ ಬಗ್ಗೆ ಮಾಹಿತಿ ತನಿಖೆಯಿಂದಷ್ಟೆ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಬೆಳ್ಳಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.










