ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಣ್ತುಂಬಿಕೊಳ್ಳಲು ರಾಜ್ಯದಲ್ಲಿ ಸೋಮವಾರ ರಜೆ ಘೋಷಣೆ ಮಾಡಿ: ಸಿಎಂಗೆ ತೇಜಸ್ವಿ ಸೂರ್ಯ ಮನವಿ…

55
firstsuddi

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆ ರಾಜ್ಯದಲ್ಲಿ ಸೋಮವಾರ ರಜೆ ಘೋಷಣೆ ಮಾಡಿ ಎಂದು ಸಂಸದ ತೇಜಸ್ವಿ ಸೂರ್ಯ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಕಾಂಗ್ರೆಸ್ ಸರ್ಕಾರ ರಾಮಮಂದಿರದ ಉದ್ಘಾಟನಾ ಕಾರ್ಯಕ್ರಮದಲ್ಲೂ ರಾಜಕೀಯ ಮಾಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ ರಜೆ ಘೋಷಣೆ ಮಾಡಿಲ್ಲ. ಅಂದು ರಾಜ್ಯದ ಕೋಟ್ಯಂತರ ಜನ ರಾಮ ಪ್ರತಿಷ್ಠಾಪನೆಯನ್ನು ನೋಡಲು ಕಾಯುತ್ತಿದ್ದಾರೆ. ಆದ್ರೆ ರಾಜ್ಯಸರ್ಕಾರ ಅಂದು ರಜೆ ನೀಡದೇ ಮೌನವಹಿಸಿದೆ ಎಂದು ಕಿಡಿಕಾರಿದ್ದಾರೆ.

ಈಗಾಗಲೇ ದೇಶದಲ್ಲಿ ಬಿಜೆಪಿ ಸರ್ಕಾರ ಇರುವ ರಾಜ್ಯಗಳು ರಜೆ ಘೋಷಣೆ ಮಾಡುತ್ತಿವೆ. ಇಡೀ ದೇಶ ಸೋಮವಾರ ರಾಮ ಲಲ್ಲಾ ಪ್ರತಿಷ್ಠಾಪನೆಗೆ ಕಾತರದಿಂದ ಕಾಯುತ್ತಿದೆ. ಇಂತಹ ಸಮಯದಲ್ಲಿ ಕರ್ನಾಟಕ ಸರ್ಕಾರ ರಜೆ ಘೋಷಣೆ ಮಾಡಬೇಕು. ಸಾವಿರಾರು ಸಂಘಟನೆಗಳು ಸಿಎಂಗೆ ಮನವಿ ಮಾಡಿವೆ. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ವಿರೋಧ ಪಕ್ಷದ ನಾಯಕರು ಸಹ ಮನವಿ ಮಾಡಿದ್ದಾರೆ. ಸಿಎಂ ಮಾತ್ರ ಯಾವುದೇ ನಿಲುವು ತೆಗದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅಂದು ರಜೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ 500 ವರ್ಷಗಳ ಇತಿಹಾಸದ ಕಾರ್ಯಕ್ರಮದಲ್ಲಿ ರಾಜ್ಯದ ಸಿಎಂ ನಿರ್ಧಾರ ಜನರ ಮನಸ್ಸಿನಲ್ಲಿ ನೂರಾರು ವರ್ಷಗಳ ಕಾಲ ಉಳಿದುಬಿಡುತ್ತದೆ. ಸಂಸದನಾಗಿ ನಾನು ಕೂಡ ಸಿಎಂಗೆ ಮನವಿ ಮಾಡುತ್ತೇನೆ. ಸಿದ್ದರಾಮಯ್ಯ ನಾಳೆಯೊಳಗೆ ರಾಜ್ಯದಲ್ಲಿ ಸೋಮವಾರ ರಜೆ ಘೋಷಣೆ ಮಾಡಬೇಕು. ಇಲ್ಲವಾದಲ್ಲಿ ಈ ಸುದಿನದ ಕಾರ್ಯವನ್ನ ನೋಡಲು ಬಿಡದ ಸರ್ಕಾರ ಎಂದು ಜನ ನೂರಾರು ವರ್ಷಗಳ ಕಾಲ ಇದನ್ನು ಮಾತನಾಡುತ್ತಾರೆ ಎಂದು ಹರಿಹಾಯ್ದಿದ್ದಾರೆ.