ಬಿಟ್ ಕಾಯಿನ್ ಪ್ರಕರಣ: ಇಬ್ಬರ ಬಂಧನ…

42
firstsuddi

ಬೆಂಗಳೂರು: ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.

ಪೊಲೀಸ್ ಇನ್ಸ್​ಪೆಕ್ಟರ್​​ ಪ್ರಶಾಂತ್ ಬಾಬು ಹಾಗೂ ಸೈಬರ್ ಎಕ್ಸ್​​ಪರ್ಟ್ ಸಂತೋಷ್ ಎಂಬವರನ್ನು ನಿನ್ನೆ ವಶಕ್ಕೆ ಪಡೆಯಲಾಗಿದ್ದು, ಇಂದು ಬಂಧಿಸಿ ಮಧ್ಯಾಹ್ನದ ಬಳಿಕ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಎಸ್ಐಟಿ ಸಿದ್ಧತೆ ನಡೆಸುತ್ತಿದೆ.

ಎಸ್ಐಟಿ ರಚನೆಯಾಗಿ ಆರು ತಿಂಗಳು ಕಳೆದಿದ್ದರೂ ಇದುವರೆಗೆ ಯಾರನ್ನೂ ಅರೆಸ್ಟ್ ಮಾಡಿರಲಿಲ್ಲ. ಪ್ರಕರಣದಲ್ಲಿ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಆದರೆ ಈಗ ತನಿಖೆ ವೇಳೆ ಕೇವಲ ಮೂರೂವರೆ ಲಕ್ಷ ರೂಪಾಯಿ ಮೌಲ್ಯದ ಬಿಟ್ ಕಾಯಿನ್ ವರ್ಗಾವಣೆ ಮಾಹಿತಿ ಲಭ್ಯವಾಗಿದೆ.

ಸದ್ಯ ಒಂದೇ ಒಂದು ಬಿಟ್ ಕಾಯಿನ್​ಗಳನ್ನು ಎಸ್​ಐಟಿ ವಶಕ್ಕೆ ಪಡೆದುಕೊಂಡಿಲ್ಲ. ತಾಂತ್ರಿಕ ವಸ್ತುಗಳು (ಎವಿಡೆನ್ಸ್​ಗಳನ್ನು ದುರುಪಯೋಗ ಮಾಡಿದ್ದಾರೆ) ಎಂಬುದು ತನಿಖೆ ವೇಳೆ ಪತ್ತೆಯಾಗಿತ್ತು. ಸದ್ಯ ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ಸಿಐಟಿ ನಡೆಸುತ್ತಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಶ್ರೀಕಿಯನ್ನು 90 ದಿನ ಪೊಲೀಸ್ ಕಸ್ಟಡಿಯಲ್ಲಿ ಇರಿಸಿಕೊಂಡಿದ್ದರು. ಸಿಸಿಬಿ ಬಂಧನದಲ್ಲಿದ್ದಾಗ ಬಿಟ್ ಕಾಯಿನ್ ಅಕ್ರಮ ಆಗಿರೋದು ಸಾಬೀತಾಗಿದೆ. ಅಕ್ರಮ ಸಾಬೀತಾದ ಹಿನ್ನೆಲೆ ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿತ್ತು. ಇದೀಗ ಈ ಪ್ರಕರಣದ ಪ್ರಮುಖ ಸಾಕ್ಷಿ ಶ್ರೀಕಿ ತನಿಖೆಗೆ ಸಹಕರಿಸದೇ ಸತಾಯಿಸುತ್ತಿದ್ದಾನೆ.

ಇನ್ನು ಈ ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರುಗಳ ಹೆಸರುಗಳು ಕೇಳಿಬಂದಿದ್ದವು. ಇದರಿಂದ ಈ ಬಿಟ್ ಕಾಯಿನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು. ಇದೀಗ ಎಸ್​ಟಿ ಅಧಿಕಾರಿಗಳು ಈ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ತನಿಖೆಯಲ್ಲಿ ಏನೆಲ್ಲ ಅಂಶಗಳು ಬೆಳಕಿಗೆ ಬರಲಿವೆ ಎನ್ನುವುದನ್ನು ಕಾದುನೋಡಬೇಕಿದೆ.