ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರು 48 ವರ್ಷಗಳ ನಂತರ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಗೆ ಭಾರಿ ಹಿನ್ನಡೆಯಾಗಿದೆ.
ಈ ಸಂಬಂಧ ತಮ್ಮ ಎಕ್ಸ್ ಪೋಸ್ಟ್ನಲ್ಲಿ ಬರೆದುಕೊಂಡ ಅವರು, ನಾನು ಹದಿಹರೆಯದವನಾಗಿದ್ದಾಗ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಇದು 48 ವರ್ಷಗಳ ನನ್ನ ಮಹತ್ವದ ಪ್ರಯಾಣವಾಗಿದೆ. ಇಂದು ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.
ನಾನು ಹೇಳಿಕೊಳ್ಳಲು ಬಹಳಷ್ಟು ಸಂಗತಿಗಳಿವೆ. ಆದರೆ ಕೆಲವೊಂದು ವಿಷಯಗಳನ್ನು ಹೇಳದೆ ಬಿಡುವುದು ಉತ್ತಮ. ಈ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ನನ್ನ ಧನ್ಯವಾದಗಳು ಎಂದು ಸಿದ್ದಿಕ್ ತಿಳಿಸಿದ್ದಾರೆ.
ಬಾಂದ್ರಾ (ವಂದ್ರೆ) ಪಶ್ಚಿಮ ಕ್ಷೇತ್ರದಿಂದ ಬಾಬಾ ಸಿದ್ದಿಕ್ ಮೂರು ಬಾರಿ ಶಾಸಕರಾಗಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ರಾಜ್ಯ ಸಚಿವರಾಗಿದ್ದರು ಮತ್ತು ಮಹಾರಾಷ್ಟ್ರ ವಸತಿ ಮತ್ತು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮುಂಬೈ ವಿಭಾಗದ ಅಧ್ಯಕ್ಷರಾಗಿದ್ದರು.
ಮಿಲಿಂದ್ ದಿಯೋರಾ ನಂತರ, ಬಾಬಾ ಸಿದ್ದಿಕಿ ಅವರು ಪಕ್ಷವನ್ನು ತೊರೆದ ಎರಡನೇ ದೊಡ್ಡ ಕಾಂಗ್ರೆಸ್ ನಾಯಕರಾಗಿದ್ದಾರೆ. ಕೆಲವು ದಿನಗಳ ಹಿಂದೆ ಮುಂಬೈನ ಬಾಂದ್ರಾ ಪೂರ್ವದ ಮಾಜಿ ಶಾಸಕ ಬಾಬಾ ಸಿದ್ದಿಕಿ ಅವರು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣ ಸೇರಬಹುದು ಎಂಬ ಸುದ್ದಿಯೂ ಹೊರಬಿದ್ದಿದೆ.










