ಕರ್ನಾಟಕ ಬಜೆಟ್ 2024: ವಕ್ಫ್ ಆಸ್ತಿ ಸಂರಕ್ಷಣೆಗೆ 100 ಕೋಟಿ, ಕ್ರಿಶ್ಚಿಯನ್ ಸಮುದಾಯಕ್ಕೆ 200 ಕೋಟಿ ರೂ. ಘೋಷಣೆ…

59
firstsuddi

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಬಜೆಟ್ 2024 ಮಂಡನೆ ಮಾಡುತ್ತಿದ್ದು, ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ 100 ಕೋಟಿ ರೂಪಾಯಿ, ಕ್ರಿಶ್ಚಿನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ಘೋಷಣೆ ಮಾಡಲಾಗಿದೆ.

ಪ್ರಸಕ್ತ ಬಜೆಟ್​ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕೈಗೊಳ್ಳಲು ನಿರ್ಧರಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ:-
• ಸರ್ಕಾರಿ/ಖಾಸಗಿ ಕಾಲೇಜುಗಳಲ್ಲಿ ಬಿ.ಎಸ್‍ಸಿ. ನರ್ಸಿಂಗ್/ ಜಿ.ಎನ್.ಎಂ ನರ್ಸಿಂಗ್ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕ ಭರಿಸುವ ಯೋಜನೆಯನ್ನು ಪುನಃ ಪ್ರಾರಂಭ ಮಾಡಲಾಗುವುದು.

• ಖ್ಯಾತ ವರ್ಗಕ್ಕೆ ಸೇರಿದ ಉದ್ಯಮಶೀಲರು ಸ್ಥಾಪಿಸುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಹೊಸ ಘಟಕಗಳನ್ನು ಸ್ಥಾಪಿಸಲು ಹಾಗೂ ಅಸ್ತಿತ್ವದಲ್ಲಿರುವ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕಾ ಘಟಕಗಳ ಉನ್ನತೀಕರಣಕ್ಕೆ ಕೆಎಸ್‍ಎಫ್‍ಸಿ ಮೂಲಕ ಪಡೆಯುವ 10 ಕೋಟಿ ರೂ.ವರೆಗಿನ ಸಾಲಕ್ಕೆ ಶೇ.6ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು.

• ರೇಷ್ಮೆ ನೂಲು ಬಿಚ್ಚಾಣಿಕೆಯಲ್ಲಿ ತೊಡಗಿರುವ ಅಲ್ಪಸಂಖ್ಯಾತ ಫಲಾನುಭವಿಗಳ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಲು ರೇಷ್ಮೆ ಇಲಾಖೆ ಮೂಲಕ ತರಬೇತಿ ಮತ್ತು ಕೆ.ಎಂ.ಡಿ.ಸಿ ಮೂಲಕ ಸಾಲ ಸೌಲಭ್ಯಗಳನ್ನು ನೀಡಲಾಗುವುದು.

• ಅಲ್ಪಸಂಖ್ಯಾತ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ವಿವಿಧ ರೀತಿಯ ಸ್ವಯಂ ಉದ್ಯೋಗ ಚಟುವಟಿಕೆಗಳಿಗೆ ಉತ್ತೇಜನ ನೀಡಲು 10 ಕೋಟಿ ರೂ. ಒದಗಿಸಲಾಗುವುದು.

• ರಾಜ್ಯದಲ್ಲಿನ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನ ಒದಗಿಸಲಾಗುವುದು ಹಾಗೂ ಭಾರತೀಯ ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ವಕ್ಫ್ ಆಸ್ತಿಗಳನ್ನು ಆದ್ಯತೆಯ ಮೇರೆಗೆ ಅಭಿವೃದ್ಧಿಪಡಿಸಲಾಗುವುದು.

• ವಕ್ಫ್ ಸಂಸ್ಥೆಯ ಧಾರ್ಮಿಕ ಗುರುಗಳಿಗೆ ಹಾಗೂ ಮುತವಲ್ಲಿಗಳಿಗೆ ಪ್ರಚಲಿತ ವಿದ್ಯಮಾನಗಳ ಬಗ್ಗೆ ಅರಿವು ಮೂಡಿಸಲು ತರಬೇತಿ ಕಾರ್ಯಗಾರಗಳನ್ನು ಏರ್ಪಡಿಸಲಾಗುವುದು.

• ರಾಜ್ಯದಲ್ಲಿನ ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು 20 ಕೋಟಿ ರೂ. ಅನುದಾನ ಒದಗಿಸಲಾಗುವುದು.

• ಮಂಗಳೂರಿನ ಹಜ್ ಭವನದ ನಿರ್ಮಾಣ ಕಾಮಗಾರಿಯನ್ನು 10 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು.

• ಜೈನರ ಪ್ರಮುಖ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗಾಗಿ 50 ಕೋಟಿ ರೂ. ಅನುದಾನ ಒದಗಿಸಲಾಗುವುದು.

• ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 200 ಕೋಟಿ ರೂ. ಒದಗಿಸಲಾಗುವುದು.

• ಬೌದ್ಧರ ಪವಿತ್ರ ಗ್ರಂಥಗಳಾದ ತ್ರಿಪಿಟಕಗಳನ್ನು ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡಲು ಸೂಕ್ತ ಅನುದಾನ ಒದಗಿಸಲಾಗುವುದು.

• ರಾಜ್ಯದಲ್ಲಿ ವಾಸಿಸುತ್ತಿರುವ ಸಿಖ್ಖ್ ಲಿಗಾರ್ ಸಮುದಾಯದ ಜನರ ಆರ್ಥಿಕ ಸಬಲೀಕರಣಕ್ಕಾಗಿ ಎರಡು ಕೋಟಿ ರೂ. ಅನುದಾನದಲ್ಲಿ ಹೊಸ ಯೋಜನೆಗಳನ್ನು ರೂಪಿಸಲಾಗುವುದು.

• ಬೀದರ್‌ನಲ್ಲಿರುವ ಶ್ರೀ ನಾನಕ್ ಝೀರಾ ಸಾಹೇಬ್ ಗುರುದ್ವಾರದ ಅಭಿವೃದ್ಧಿಗಾಗಿ ಒಂದು ಕೋಟಿ ರೂ. ಅನುದಾನ ನೀಡಲಾಗುವುದು.

• 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

• 100 ಸಂಖ್ಯಾಬಲವುಳ್ಳ 100 ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.

• 100 ಹೊಸ ಮೌಲಾನಾ ಆಜಾದ್ ಶಾಲೆಗಳನ್ನು ತೆರೆಯಲಾಗುವುದು.

• ಸ್ವಂತ ಕಟ್ಟಡವನ್ನು ಹೊಂದಿರುವ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಲಾಗುವುದು.

• ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಅವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು.

• ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2024-25ನೇ ವರ್ಷದಲ್ಲಿ ಒಟ್ಟಾರೆಯಾಗಿ 393 ಕೋಟಿ ರೂ.ಗಳ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುವುದು.