ಚಿಕ್ಕಮಗಳೂರು: ಖಾರದಪುಡಿ ಎರಚಿ ಒಂಟಿ ಮನೆ ದರೋಡೆ ಮಾಡಿದ್ದ ಐವರು ಖತರ್ನಾಕ್ ಆರೋಪಿಗಳನ್ನು ಬಾಳೂರು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜಿ. ಹೊಸಳ್ಳಿ ಗ್ರಾಮದ ಎಸ್ಟೇಟ್ ಮಾಲಿಕ ಅನಂತರಾಮ್ ಮನೆಗೆ ನುಗ್ಗಿದ್ದ ಮಂಗಳೂರು ಮೂಲದ ಹತ್ತು ಜನ ಖತರ್ನಾಕ್ ದರೋಡೆಕೋರರು ಏಕಾಏಕಿ ನುಗ್ಗಿ ಖಾರದಪುಡಿ ಎರಚಿ ಮನೆಯಲ್ಲಿದ್ದ 5 ಲಕ್ಷ ಹಣ, 1.50 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು.
ಪ್ರಕರಣದ ಹಿನ್ನಲೆ:- ಇದೇ ತಿಂಗಳು 15ರ ರಾತ್ರಿ ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿ ಜೆ.ಹೊಸಳ್ಳಿ ಗ್ರಾಮದ ಅನಂತರಾಮ್ ಎಂಬುವವರ ಮನೆಗೆ ನುಗ್ಗಿದ ದರೋಡೆಕೋರರು, ಮನೆಯಲ್ಲಿದ್ದವರಿಗೆ ಖಾರದ ಪುಡಿ ಎರಚಿ, ಮನೆಯವರಿಗೆಲ್ಲಾ ಹೆದರಿಸಿ, ತಡೆಯಲು ಬಂದ ಶ್ರೀನಿವಾಸಮೂರ್ತಿ ಎಂಬ ಕೆಲಸಗಾರರಿಗೆ ಕತ್ತಿ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಮನೆಯಲ್ಲಿದ್ದ ಟಿ.ವಿ.ಗಳನ್ನು ಒಡೆದು ಹಾಕಿ ಗಾರ್ಡೇಜ್ ಬೀರುವಿನಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಚಾರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಮೂಲದ ಅನ್ಸರ್ ಆಲಿಯಾಸ್ ಅಂಚು, ಬೆಳ್ತಂಗಡಿ ಮೂಲದ ಖಲಂದರ್ ಆಲಿಯಾಸ್ ಮೊಹಮ್ಮದ್ ಗೌಸ್, ಮೂಡಿಗೆರೆ ತಾಲ್ಲೂಕು ಬೆಟ್ಟದಮನೆ ಗ್ರಾಮದ ಶೈನಿಂಗ್ ಕುಮಾರ್ ಆಲಿಯಾಸ್ ಶೈನಿ, ಅಣಜೂರು ಗ್ರಾಮದ ಅಶ್ರಫ್ ಆಲಿಯಾಸ್ ಹಸರಬ್, ಜನ್ನಾಪುರ ಗ್ರಾಮದ ಉಮೇಶ್ ಎಂದು ಗುರುತಿಸಲಾಗಿದೆ. ಇವರೆಲ್ಲಾ ಇಸ್ಪೀಟ್ ಆಟದ ಗ್ಯಾಂಗ್ ನಲ್ಲಿ ಪರಸ್ಪರ ಪರಿಚಯಸ್ಥರು ಎಂದು ತಿಳಿದುಬಂದಿದೆ. ಇನ್ನೂ ದರೋಡೆ ಮಾಡಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಇವರಲ್ಲಿ ಅನ್ಸರ್ ಎಂಬಾತ ದರೋಡೆ ನಡೆಸಿ ಎಸ್ಕೇಪ್ ಆಗುವಾಗ ಕತ್ತಲೆಯಲ್ಲಿ ದಾರಿ ತಪ್ಪಿ ಸ್ಥಳೀಯರ ಕೈಗೆ ಸಿಕ್ಕಿಬಿದ್ದು ಪೊಲೀಸರ ಅತಿಥಿಯಾಗಿದ್ದ, ಉಳಿದವರು ದರೋಡೆ ಮಾಡಿ ಬೇರೆ ಬೇರೆ ದಿಕ್ಕಿಗೆ ತೆರಳಿದ್ದರು. ಪೊಲೀಸರು ಕಾರ್ಯಾಚರಣೆ ನಡೆಸಿ ಒಬ್ಬೊಬ್ಬರೇ ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ. ಪ್ರಕರಣದಲ್ಲಿ ಇನ್ನೂ ನಾಲ್ವರು ಆರೋಪಿಗಳು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಸದರಿ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಟ್ಟದಮನೆ ಮೂಲದ ಶೈನಿಂಗ್ ಕುಮಾರ್ ಎಂಬಾತ ಕಾಫಿ ವ್ಯಾಪಾರಿಯಾಗಿದ್ದು, ದರೋಡೆ ನಡೆದ ಅನಂತ ಹೆಬ್ಬಾರ್ ಅವರ ಮನೆಯಿಂದ ಕಾಫಿ ಖರೀದಿಸುತ್ತಿದ್ದ ಎಂದು ತಿಳಿದುಬಂದಿದೆ. ಅವನೇ ಈ ಮನೆಯನ್ನು ದರೋಡೆಗೆ ಟಾರ್ಗೆಟ್ ಮಾಡಿ ಉಳಿದವರನ್ನು ಒಟ್ಟು ಸೇರಿಸಿ ಈ ಕೃತ್ಯಕ್ಕೆ ಮುಂದಾಗಿದ್ದ ಎನ್ನಲಾಗಿದೆ. ಇವರೆಲ್ಲರೂ ದರೋಡೆ ಮಾಡುವ ಹಿಂದಿನ ದಿನ ಕೊಟ್ಟಿಗೆಹಾರದ ಅನಿಲ್ ಲಾಡ್ಜ್ ನಲ್ಲಿ ತಂಗಿದ್ದರು ಎನ್ನಲಾಗಿದೆ.
ಸದರಿ ಪ್ರಕರಣವನ್ನು ಡಾ. ವಿಕ್ರಂ ಆಮಟೆ, ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಅಡಿಸನಲ್ ಎಸ್ಪಿ ಗಳಾದ ಯೋಗೇಂದ್ರನಾಥ್ ಮತ್ತು ಡಿ.ವೈ.ಎಸ್ಪಿ ಶೈಲೇಂದ್ರ ಹೆಚ್.ಎಂ. ಅವರ ಮಾರ್ಗದರ್ಶನದಲ್ಲಿ ಮೂಡಿಗೆರೆ ಸರ್ಕಲ್ ಇನ್ಸ್ ಪೆಕ್ಟರ್ ಸೋಮೇಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ತ್ವರಿತಗತಿಯಲ್ಲಿ ವಿವಿಧ ಆಯಾಮಗಳಿಂದ ಆರೋಪಿಗಳ ಮಾಹಿತಿ ಸಂಗ್ರಹಿಸಿ ದರೋಡೆ ಕೃತ್ಯದಲ್ಲಿ ಭಾಗಿಯಾಗಿದ್ದವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.










