ಮುಡಾ ಪ್ರಕರಣ: ಕೋರ್ಟ್ ಆದೇಶದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗೆ ಬಿಜೆಪಿ ಕರೆ.

37

ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದರು. ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದ್ದು, ರಾಜ್ಯಪಾಲರ ಆದೇಶವನ್ನು ಕೋರ್ಟ್ ಎತ್ತಿ ಹಿಡಿದಿದೆ. ಈ ಹಿನ್ನಲೆ ಸಿಎಂ ರಾಜೀನಾಮೆಗೆ ಆಗ್ರಹಿಸಿ ಇಂದು(ಮಂಗಳವಾರ) ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ಬಿಜೆಪಿಕರೆ ನೀಡಿದೆ.
ತನಿಖೆಗೆ ಹೈಕೋರ್ಟ್ ಅಸ್ತು ಹಿನ್ನೆಲೆ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಮೈಸೂರು ಬಿಜೆಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಮಾಡುತ್ತಿದೆ. ಈ ವೇಳೆ ಮಾತನಾಡಿದ ನಾರಾಯಣಸ್ವಾಮಿ, ‘ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಕೋರ್ಟ್‍ಗೆ ಹೋಗಿ ನಿರ್ದೋಷಿ ಎಂದು ತೀರ್ಪು ಬಂದ ಮೇಲೆ ಮತ್ತೆ ಅಧಿಕಾರಕ್ಕೆ ಬನ್ನಿ. ಮೊದಲು ನ್ಯಾಯಾಲಯದ ತೀರ್ಪು ಎತ್ತಿ ಹಿಡಿಯುವ ಕೆಲಸ ಮಾಡಿ ಎಂದಿದ್ದಾರೆ. ಇನ್ನು ಪ್ರತಿಭಟನೆಯಲ್ಲಿ ಶಾಸಕ ಶ್ರೀವತ್ಸ, ಜಿಲ್ಲಾಧ್ಯಕ್ಷರಾದ ಎಲ್.ನಾಗೇಂದ್ರ ಹಾಗೂ ಎಲ್‍ಆರ್.ಮಹದೇವಸ್ವಾಮಿ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ನಿರಂಜನ್ ಸೇರಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದಾರೆ.