ಬೆಂಗಳೂರು: ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಒಳಸಂಚು ರೂಪಿಸಿದ್ದ ಆರೋಪದಡಿ ಹೆಬ್ಬಗೋಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಐಯಣ್ಣ ರೆಡ್ಡಿ ಅವರನ್ನು ಸಿಐಡಿಯ ವಿಶೇಷ ತನಿಖಾ ದಳದ ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯೇ ಐಯಣ್ಣ ರೆಡ್ಡಿ ಅವರನ್ನು ವಶಕ್ಕೆ ಪಡೆದ ಎಸ್ಐಟಿ ತನಿಖಾಧಿಕಾರಿಗಳು, ವಿಚಾರಣೆ ಬಳಿಕ ಬಂಧನಕ್ಕೊಳಪಡಿಸಿದರು. ಆರೋಪಿಗಳು ನಡೆಸುತ್ತಿದ್ದ ಹನಿಟ್ರ್ಯಾಪ್ಗೆ ಇನ್ಸ್ಪೆಕ್ಟರ್ ಸಹಾಯ ಮಾಡಿದ್ದರು. ಅಲ್ಲದೇ ಆರೋಪಿಗಳು ಕೆಲವು ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಸಂಚು ರೂಪಿಸಿದ್ದು ಗೊತ್ತಿದ್ದರೂ ಇನ್ಸ್ಪೆಕ್ಟರ್ ಮಾಹಿತಿ ಬಚ್ಚಿಟ್ಟಿದ್ದರೆಂಬ ಆರೋಪದಡಿ ಬಂಧಿಸಲಾಗಿದೆ. ರಾಜಕಾರಣಿಗಳಿಗೆ ಏಡ್ಸ್ ಚುಚ್ಚುಮದ್ದು ಪ್ರಯೋಗಿಸಲು ಯುವಕನೊಬ್ಬನ ಮನವೊಲಿಸಲು ಆರೋಪಿಗಳು ಯತ್ನ ನಡೆಸಿದ್ದು, ಮ್ಯಾಜಿಸ್ಟ್ರೇಟ್ ಮುಂದೆ ಯುವಕನ ಹೇಳಿಕೆಯನ್ನು ದಾಖಲಿಸಿದ ನಂತರ, ಎಸ್ಐಟಿ ಅಧಿಕಾರಿಗಳು ಪೊಲೀಸ್ ಠಾಣೆಯಿಂದಲೇ ಇನ್ಸ್ಪೆಕ್ಟರ್ ನನ್ನು ಬಂಧನಕ್ಕೊಳಪಡಿಸಿದ್ದಾರೆ










