ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ.

42

ನವದೆಹಲಿ: ವೃಕ್ಷಮಾತೆ ಎಂದೇ ಪ್ರಸಿದ್ದರಾಗಿದ್ದ ಪುರಸ್ಕೃತೆ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ದಾರಿದೀಪವಾಗಿದ್ದ ತುಳಸಿ ಗೌಡ ಅವರ ಜೀವನ ನಮಗೆಲ್ಲ ಪ್ರೇರಣೆಯಾಗಲಿ ಎಂದು ನರೇಂದ್ರ ಮೋದಿ ಸಂತಾಪ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ. ಕರ್ನಾಟಕದ ಖ್ಯಾತ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ತುಳಸಿಗೌಡ ನಿಧನದಿಂದ ತೀವ್ರ ದುಃಖವಾಗಿದೆ. ಪ್ರಕೃತಿಯನ್ನು ಸಂರಕ್ಷಿಸಲು ಸಾವಿರಾರು ಸಸಿಗಳನ್ನು ನೆಡಲು ಮತ್ತು ನಮ್ಮ ಪರಿಸರವನ್ನು ಸಂರಕ್ಷಿಸುವುದಕ್ಕಾಗಿ ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟರು. ಪರಿಸರ ಸಂರಕ್ಷಣೆ ವಿಚಾರದಲ್ಲಿ ಅವರು ಇನ್ನು ಮುಂದೆಯೂ ನಮಗೆ ದಾರಿದೀಪವಾಗಿ ಇರಲಿದ್ದಾರೆ. ಈ ಭೂಮಿಯ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ತುಳಸಿ ಗೌಡ ಅವರ ಕೆಲಸಕಾರ್ಯಗಳು ಮುಂದಿನ ಪೀಳಿಗೆಗಳಿಗೆ ಸ್ಫೂರ್ತಿಯಾಗಲಿ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ಸ್ವಗೃಹದಲ್ಲಿ ತುಳಸಿ ಗೌಡ ಸೋಮವಾರ ನಿಧನರಾದರು. ಹಾಲಕ್ಕಿ ಸಮುದಾಯದ ತುಳಸಿ ಗೌಡ ವೃಕ್ಷಮಾತೆ ಎಂದೇ ಖ್ಯಾತರಾಗಿದ್ದರು. ತುಳಸಿ ಗೌಡ ಅವರು ಈವರೆಗೂ ಒಂದು ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು, ಬೃಹತ್ ಕಾಡನ್ನೇ ಬೆಳೆಸಿದ್ದಾರೆ. ಕಳೆದ 60 ವರ್ಷಗಳಿಂದ ಅವರು ಪರಿಸರ ಸಂರಕ್ಷಣೆಯ ಕಾರ್ಯ ಹಾಗೂ ಪರಿಸರ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ ಇವರ ಪರಿಸರ ಪ್ರೇಮವನ್ನು ಮೆಚ್ಚಿ 2021ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು