ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಕರ್ನಾಟಕದ ಬಡ ಮತ್ತು ಮಧ್ಯಮ ವರ್ಗದವರಿಗೆ 4,67,580 ಮನೆಗಳನ್ನು ಕಟ್ಟಿ ಕೊಡಲು ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಬೆಂಗಳೂರಿನಲ್ಲಿ ತಿಳಿಸಿದರು. ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬಂದಿರುವ ಚೌಹಾಣ್, ಸುದ್ದಿಗಾರರ ಜತೆ ಮಾತಾಡಿದರು. ಪ್ರತೀ ಬಡವನಿಗೂ ಮನೆ ಸಿಗಬೇಕು ಅನ್ನೋದು ಮೋದಿಯವರ ಸಂಕಲ್ಪ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ 2,57,246 ಮನೆಗಳನ್ನು ಕಟ್ಟಲು ಒಪ್ಪಿಗೆ ಕೊಟ್ಟಿದ್ದೆವು, ಅನುದಾನವನ್ನೂ ಕೊಟ್ಟಿದ್ದೆವು. ಈಗ ಮತ್ತೆ ಕರ್ನಾಟಕದ ಬಡಜನರಿಗೆ ಮನೆ ಕಟ್ಟಲು ಟಾರ್ಗೆಟ್ ಹೆಚ್ಚಿಸಲಾಗಿದೆ ಎಂದು ತಿಳಿಸಿದರು. ಕೇಂದ್ರವು 4,67,580 ಮನೆಗಳನ್ನು ರಾಜ್ಯದಲ್ಲಿ ಕಟ್ಟಲು ಒಪ್ಪಿಗೆ ಕೊಟ್ಟಿದೆ. ಮನೆಗಳ ನಿರ್ಮಾಣ ಕಾರ್ಯಕ್ಕೆ ವೇಗ ಕೊಡಲು ಸೂಚಿಸಲಾಗಿದೆ. ಅಡಿಕೆ ಬೆಳೆ ಯೋಜನೆಗಳಿಗೂ ಅನುದಾನ ಕೊಡ್ತೇವೆ. 3 ಸಚಿವರೂ ಒಂದಷ್ಟು ಬೇಡಿಕೆ ಕೊಟ್ಟಿದ್ದು, ಆದ್ಯತೆ ಮೇರೆಗೆ ಈಡೇರಿಸಲಾಗುವುದು ಎಂದು ತಿಳಿಸಿದರು.










