ಕೊಪ್ಪಳ : ಬೈಕ್ ಹಾಗೂ ಮಿನಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಕನೂರು ತಾಲ್ಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ. ಬೈಕ್ ಸವಾರ ಸಂತೋಷ್ ವಂಕಿ(25), ಭೀಮವ್ವ ಗೋಡಿ(70) ಹಾಗೂ ರಂಗಪ್ಪ ನಾಗಣ್ಣವರ(80) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಬಾದಾಮಿ ತಾಲ್ಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲ್ಲೂಕಿನ ಹಿರೇಸಿಂದೋಗಿ ಗ್ರಾಮಕ್ಕೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಮಿನಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಹಾಗೂ ಮಿನಿ ಬಸ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ 8ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










