ಧಾರವಾಡ : ಕಾರು ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಣ್ಣಿಗೇರಿ ಬಳಿಯ ಕೊಂಡಿಕೊಪ್ಪ ಕ್ರಾಸ್ ಬಳಿ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿಯ ವಿಠ್ಠಲ ನಗರ ನಿವಾಸಿಗಳಾದ ಈರಣ್ಣಾ(24), ಹನುಮಪ್ಪ ಭೋವಿ(37), ನಾಗಮ್ಮ(48) ಹಾಗೂ ಸಣ್ಣಗಂಗಣ್ಣ(52) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಒಟ್ಟು ಆರು ಮಂದಿ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಮಾನ್ವಿಯಿಂದ ಕಾರವಾರದ ಹಲಗದ ಆಸ್ಪತ್ರೆಗೆ ತೆರಳುತ್ತಿದ್ದರು. ಅಣ್ಣಿಗೇರಿ ಬಳಿ ತೆರಳುತ್ತಿದ್ದ ವೇಳೆ ಎದುರಿನಿಂದ ಬಂದ ಕ್ರೂಸರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿಯ ಪೈಕಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಕ್ರೂಸರ್ ಚಾಲಕ ಹಾಗೂ ಕಾರಿನಲ್ಲಿ ಉಳಿದ ಇಬ್ಬರು ಗಂಭೀರ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಈ ಕುರಿತು ಅಣ್ಣಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










