ಚಿಕ್ಕಮಗಳೂರು: ರಾಷ್ಟ್ರೀಯತೆ ಮತ್ತು ಭಾವೈಕ್ಯತೆ ಪ್ರತಿಯೊಬ್ಬರ ಅಂತರಾಳದಿಂದ ಹೊರಹೊಮ್ಮಬೇಕು, ಆಗಮಾತ್ರ ದೇಶ ಶಾಂತಿ ಹಾಗೂ ನೆಮ್ಮದಿಯ ಬೀಡಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಜೆಸಿಂತಾ ಅನಿಲ್ಕುಮಾರ್ ಹೇಳಿದರು.
ಭಾರತ ಸೇವಾದಳದ ಜ್ಞಾನಜ್ಯೋತಿ ಘಟಕದಿಂದ ನಗರದ ಆಜಾದ್ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಬುಧವಾರ ನಡೆದ ರಾಷ್ಟ್ರೀಯ ಭಾವೈಕ್ಯತಾ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಭಾರತ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿದ ರಾಷ್ಟ್ರ, ಇಲ್ಲಿ ಹಿಂದು, ಮುಸ್ಲಿಂ, ಕ್ರೈಸ್ತ ಸೇರಿದಂತೆ ಅನೇಕ ಮತ ಮತ್ತು ಧರ್ಮಗಳ ಜನರಿದ್ದಾರೆ, ಅವರೆಲ್ಲರೂ ಭಿನ್ನಾಭಿಪ್ರಾಯಗಳನ್ನು, ಆಂತರಿಕ ವೈರುದ್ಯಗಳನ್ನು ಬದಿಗಿಟ್ಟು ಸಾಮರಸ್ಯದಿಂದ ಬಾಳಬೇಕು, ಆ ಮೂಲಕ ಭಾವೈಕ್ಯತೆಯನ್ನು ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮಾತನಾಡಿ ಮಕ್ಕಳು ಎಳೆಯ ವಯಸ್ಸಿನಿಂದಲೇ ಭಾವೈಕ್ಯತೆ ಮತ್ತು ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತ ಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ಭಾವೈಕ್ಯತಾ ಸಪ್ತಾಹದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ಸಪ್ತಾಹದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡÀಲಾಯಿತು.
ನಗರದ ಉರ್ದು ಶಾಲೆಯ ಶಿಕ್ಷಕ ಎಸ್.ಎಂ.ಮಹೇಶಪ್ಪ ಅವರಿಗೆ ಭಾರತ ಸೇವಾದಳದ ಸೇವಾರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮುಖ್ಯ ಶಿಕ್ಷಕಿ ಬಿ.ಆರ್.ಗೀತಾ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಮಹೇಶ್ವರಪ್ಪ, ಶಿಕ್ಷಕರಾದ ಜಯಂತಿ, ಸಾವಿತ್ರಿ, ನಾಗವೇಣಿ, ವೇದಾವತಿ ಉಪಸ್ಥಿತರಿದ್ದರು.
Home ಸ್ಥಳಿಯ ಸುದ್ದಿ ರಾಷ್ಟ್ರೀಯತೆ ಮತ್ತು ಭಾವೈಕ್ಯತೆ ಪ್ರತಿಯೊಬ್ಬರ ಅಂತರಾಳದಿಂದ ಹೊರಹೊಮ್ಮಬೇಕು: ಜೆಸಿಂತಾ ಅನಿಲ್ಕುಮಾರ್…










