ಬೆಂಗಳೂರು: ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನಲ್ಲಿ ನಡೆದಿದೆ. ರಂಜಿತ(24) ಮೃತ ಯುವತಿ. ರಂಜಿತ ಮುಳಬಾಗಿಲು ಗ್ರಾಮದ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ ಅಶೋಕ್ ಎಂಬಾತನೊಂದಿಗೆ ವಿವಾಹವಾಗಿತ್ತು. ವಿವಾಹವಾದ ಬಳಿಕ ರಂಜಿತಾ ಹಾಗೂ ಅಶೋಕ್ ಕೆ.ಆರ್ ಪುರಂನ ದೇವಸಂದ್ರ ಮುಖ್ಯರಸ್ತೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಆದರೆ ಕಳೆದ ರಾತ್ರಿ ನೇಣು ಬಿಗಿದ ಸ್ಥಿತಿಯಲ್ಲಿ ರಂಜಿತಾ ಮೃತ ದೇಹ ಪತ್ತೆಯಾಗಿದ್ದು, ರಂಜಿತಾ ಸಾವಿನ ನಂತರ ಅಶೋಕ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ಬಗ್ಗೆ ಕೆ.ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










