ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪಠ್ಯದ ಜೊತೆಗೆ ಜಾನಪದವನ್ನೂ ಕಲಿಸಬೇಕು: ಸೂರಿ ಶ್ರೀನಿವಾಸ್…

366
firstsuddi

ಚಿಕ್ಕಮಗಳೂರು: ನಮ್ಮ ಸಂಸ್ಕøತಿಯ ತಾಯಿ ಬೇರಾದ ಜಾನಪದವನ್ನು ಮುಂದಿನ ತಲೆಮಾರಿಗೆ ಉಳಿಸುವುದು ಇಂದಿನ ಯುವಪೀಳಿಗೆಯ ಜವಾಬ್ದಾರಿ ಎಂದು ಜಿಲ್ಲಾ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಜಿಲ್ಲಾ ಕನ್ನಡ ಜಾನಪದ ಪರಿಷತ್ ತಾಲ್ಲೂಕು ಮತ್ತು ಹೋಬಳಿ ಘಟಕಗಳ ಆಶ್ರಯದಲ್ಲಿ ನಗರದ ಶ್ರೀ ಗುರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಸುಗ್ಗಿ ಹಬ್ಬದಲ್ಲಿ ಜಾನಪದ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾನಪದ ಸಂಸ್ಕೃತಿ ನಮ್ಮೆಲರ ಬದುಕಿನಲ್ಲಿ ಹಾಸುಹೊಕ್ಕಾಗಿದೆ ಅದರಿಂದಾಗಿ ಸಮಾಜದಲ್ಲಿ ಇನ್ನೂ ಮಾನವೀಯ ಮೌಲ್ಯಗಳು, ಸಂಬಂಧಗಳು ಉಳಿದಿವೆ ಎಂದ ಅವರು ಜಾನಪದ ನಶಿಸಿದರೆ ನಾವು ನಮ್ಮತನವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪಠ್ಯದ ಜೊತೆಗೆ ಜಾನಪದವನ್ನೂ ಕಲಿಸಬೇಕು ಆ ಮೂಲಕ ಅದನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಕಿವಿಮಾತು ಹೇಳಿದರು.
ಸಂಸ್ಥೆಯ ಕಾರ್ಯದರ್ಶಿ ಎಸ್.ಎಸ್.ಚಂದ್ರಶೇಖರ್ ಮಾತನಾಡಿ ಜಾನಪದ ಕಲೆ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ಮಕ್ಕಳಿಗೆ ಶಾಲಾ ಹಂತದಿಂದಲೇ ಅದನ್ನು ಕಲಿಸಬೇಕು ಎಂದು ಸಲಹೆ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ತಾಲ್ಲೂಕು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ಬಿ.ಆರ್.ಜಗಧೀಶ್ ವಿದ್ಯಾರ್ಥಿಗಳಲ್ಲಿ ಜಾನಪದದ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪರಮೇಶ್ವರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು, ನಿವೃತ್ತ ವೃತ್ತ ನಿರೀಕ್ಷಕ ಬಾಲಚಂದ್ರೇಗೌಡ, ಪಟ್ಟಣ ಸಹಕಾರ ಬ್ಯಾಂಕಿನ ನಿರ್ದೇಶಕಿ ಪದ್ಮಾ ತಿಮ್ಮೇಗೌಡ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಪೂರ್ಣೇಶ್ ಕಾರ್ಯಕ್ರಮವನ್ನು ನಿರೂಪಿಸಿದರು, ಶಿಕ್ಷಕರಾದ ಲೋಹಿತ್ ಸ್ವಾಗತಿಸಿದರು, ಶೃತಿ ವಂದಿಸಿದರು.

firstsuddi