ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಮಾಡಲು ನಿರ್ಧರಿಸಿರುವ ಕನ್ನಡ ಪರ ಸಂಘಟನೆಗಳ ನಿರ್ಧಾರವನ್ನು ಕೈ ಬಿಡುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆಯ ಕರ್ನಾಟಕ ಬಂದ್ಗೆ ಅವಕಾಶ ಇಲ್ಲ. ಬಂದ್ ಮಾಡಿ ಜನರಿಗೆ ತೊಂದರೆ ಕೊಡುವಂತಹ ಕೆಲಸ ಮಾಡಬೇಡಿ. ಎಲ್ಲಾ ಸಮಾಜವನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಕನ್ನಡಕ್ಕೆ ಏನು ಆಧ್ಯತೆ ಕೊಡಬೇಕೋ, ಅದನ್ನು ನೀಡಲು ನಾನು ಸಿದ್ಧನಿದ್ದೇನೆ. ಕನ್ನಡದ ಮುಖಂಡರು ಏನು ಹೇಳುತ್ತಾರೋ ಅದನ್ನು ಮಾಡಲು ನಾನು ಸಿದ್ಧನಿದ್ದೇನೆ. ದಯಾಮಾಡಿ ಯಾರು ಬಂದ್ ಮಾಡಬೇಡಿ ಎಂದು ಮನವಿ ಮಾಡಿಕೊಂಡರು.
ಇದೇ ವೇಳೆ ನೈಟ್ ಕರ್ಫ್ಯೂ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನೈಟ್ ಕರ್ಫ್ಯೂ ಜಾರಿ ವಿಚಾರವಾಗಿ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.










