ರಾಮನಗರ: ಕರ್ತವ್ಯನಿರತ ಖಾಸಗಿ ಸುದ್ದಿವಾಹಿನಿಯ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಮೃತರನ್ನು ಪಬ್ಲಿಕ್ ಟಿವಿಯ ಜಿಲ್ಲಾ ವರದಿಗಾರ ಹನುಮಂತು ಎಂದು ಗುರುತಿಸಲಾಗಿದೆ. ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ.
ಎಟಿಎಂ ಹಣ ಸಾಗಿಸುತ್ತಿದ್ದ ವಾಹನ ಡಿಕ್ಕಿ ಹೊಡೆದ ಪರಿಣಾಮ ಹನುಮಂತು ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಅಪಘಾತಕ್ಕೆ ಕಾರಣವಾದ ವಾಹನವನ್ನು ಜಪ್ತಿ ಮಾಡಿ ಚಾಲಕನನ್ನು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾಜಿ ಸಿಎಂ ಕಂಬನಿ, ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಇನ್ನು ವರದಿಗಾರ ಹನುಮಂತು ನಿಧನಕ್ಕೆ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಕಂಬನಿ ಮಿಡಿದಿದ್ದಾರೆ. ಅಂತೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ಕಂಬನಿ ಮಿಡಿದಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ. ತನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು. ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು. ಅವರ ಕುಟುಂಬದ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ. ಕರ್ತವ್ಯ ನಿರ್ವಹಣೆ ವೇಳೆ ಪ್ರಾಣತೆತ್ತ ಹನುಮಂತು ಅವರ ಆತ್ಮಕ್ಕೆ ಶಾಂತಿ ದಕ್ಕಲಿ ಎಂದು ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.










