ಬೆಂಗಳೂರು : ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಭಾರತದ ಯೋಧರು ಹುತಾತ್ಮರಾಗಿದ್ದು, ಅವರಿಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ರಾಜ್ಯದ ಯೋಧ ಗುರು ಹುತಾತ್ಮರಾಗಿದ್ದಾರೆ. 82ನೇ ಬೆಟಾಲಿಯನ್ ನ ಯೋಧರಾಗಿದ್ದ ಗುರು ಅವರು ಮಂಡ್ಯದ ಮದ್ದೂರಿನ ಗುಡಿಗೆರೆ ನಿವಾಸಿ. ದೇಶಕ್ಕಾಗಿ ಗುರು ಸೇರಿದಂತೆ ಎಲ್ಲ ಯೋಧರ ತ್ಯಾಗ ಸದಾ ಸ್ಮರಣೀಯ. ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ನೀಡಲಿ.
ಹುತಾತ್ಮ ಯೋಧ ಮಂಡ್ಯದ ಎಚ್. ಗುರು ಅವರ ಕುಟುಂಬ ವರ್ಗದೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದೇನೆ. ಜಮ್ಮುವಿನಲ್ಲಿ ಭಯೋತ್ಪಾದಕರ ಕುಕೃತ್ಯಕ್ಕೆ ಬಲಿಯಾದ ನಮ್ಮ ವೀರ ಯೋಧನ ಕುಟುಂಬಕ್ಕೆ ಆಸರೆಯಾಗಿ ನಿಲ್ಲಬೇಕಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಪರಿಹಾರವನ್ನು ಕೂಡಲೇ ದೊರಕಿಸಿಕೊಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಟ್ವಿಟ್ ಮೂಲಕ ತಿಳಿಸಿದ್ದಾರೆ.










