ಉಡುಪಿ : ದಾಖಲಾತಿ ಮುಗಿಸಿಕೊಂಡು ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ತಾಲ್ಲೂಕಿನ ನಾವುಂದದಲ್ಲಿ ನಡೆದಿದೆ. ಮರವಂತೆ ಗ್ರಾಮದ ನಿವಾಸಿ ಕಿಶನ್ ಖಾರ್ವಿ(17) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿ ದ್ವಿತೀಯ ಪಿಯುಸಿ ವಿದ್ಯಾಭ್ಯಾಸಕ್ಕಾಗಿ ಕಾಲೇಜಿನಲ್ಲಿ ದಾಖಲಾತಿ ಮುಗಿಸಿಕೊಂಡು ಜೆರಾಕ್ಸ್ ಮಾಡಿಸಲು ರಸ್ತೆ ದಾಟುತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕ ಸುರೇಶ್ ನಾಯಕ್ ಹಾಗೂ ಎಸ್ಐ ಸಂಗೀತ ಅವರು ಸ್ಥಳ ಪರಿಶೀಲನೆ ನಡೆಸಿ ಗಂಗೊಳ್ಳಿ ಆಪದ್ಬಾಂಧವ ಆಂಬುಲೆನ್ಸ್ನಲ್ಲಿ ವಿದ್ಯಾರ್ಥಿಯ ಶವವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.










