ಚಿಕ್ಕಮಗಳೂರು : ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್ ಧರ್ಮೇಗೌಡ(65) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಗುಣಸಾಗರ ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ತಮ್ಮ ಮನೆಯಿಂದ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದರು. ಬಳಿಕ ನಾನು ಯಾರೊಂದಿಗೊ ಮಾತನಾಡಬೇಕು ನೀವು ತೆರಳಿ ಎಂದು ಕಾರಿನ ಚಾಲಕ ಹಾಗೂ ಗನ್ಮ್ಯಾನ್ ಅನ್ನು ಕಳುಹಿಸಿದ್ದಾರೆ. ರಾತ್ರಿ 10 ಗಂಟೆಯಾದರೂ ಮನೆಗೆ ವಾಪಾಸ್ ಬರದ ಕಾರಣ ಗನ್ ಮ್ಯಾನ್ ಮತ್ತು ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದರು. ಮಧ್ಯರಾತ್ರಿ ವೇಳೆಗೆ ರೈಲ್ವೆ ಹಳಿ ಪಕ್ಕದಲ್ಲಿ ಮೃತದೇಹ ಪತ್ತೆಯಾಗಿದ್ದು, ಧರ್ಮೇಗೌಡ ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ಅಕ್ಷಯ್ ಕುಮಾರ್ ಹಾಗೂ ಶಾಸಕ ಸಿ.ಟಿ. ರವಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










