ಚಿಕ್ಕಮಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದಿಂದ ನಾಲ್ಕನೇ ಜಿಲ್ಲಾ ಜಾನಪದ ಸಮ್ಮೇಳನ ನಗರದ ಕುವೆಂಪು ಕಲಾಮಂದಿರದಲ್ಲಿ ಅ.20ರಂದು ನಡೆಯಲಿದೆ.
ಅಂದು ಬೆಳಿಗ್ಗೆ ಪರಿಷತ್ತಿನ ಗೌರವಾಧ್ಯಕ್ಷ ಅತ್ತೀಕಟ್ಟೆ ಗುರುನಾಥಗೌಡ ರಾಷ್ಟ್ರಧ್ವಜಾರೋಹಣ, ಹಿರಿಯ ವೀರಗಾಸೆ ಕಲಾವಿದ ಡಾ. ಮಾಳೇನಹಳ್ಳಿ ಬಸಪ್ಪ ನಾಡಧ್ವಜ ಮತ್ತು ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಜಾನಪದ ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ.
8:30ಕ್ಕೆ ತಾಲೂಕು ಕಚೇರಿ ಆವರಣದಲ್ಲಿ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಶಾಸಕ ಎಚ್.ಡಿ.ತಮ್ಮಯ್ಯ ಚಾಲನೆ ನೀಡಲಿದ್ದು, 10 ಗಂಟೆಗೆ ಕಲಾಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಸಮ್ಮೇಳನಾಧ್ಯಕ್ಷ ಬಿ.ಪಿ.ಪರಮೇಶ್ವರಪ್ಪ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಾಸಕ ಎಚ್.ಡಿ.ತಮ್ಮಯ್ಯ ಜಾನಪದ ಪ್ರದರ್ಶನದ ಮಳಿಗೆಗಳನ್ನು, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಜಾನಪದ ವಾದ್ಯಗಳನ್ನು ಉದ್ಘಾಟಿಸಲಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ರಾಮಚಂದ್ರೇಗೌಡ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದು, ಆಶಾಕಿರಣ ಅಂದ ಮಕ್ಕಳ ಶಾಲೆಯ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ ಜಾನಪದ ಸಿರಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ್ ಆಶಯ ನುಡಿಗಳನ್ನಾಡಲಿದ್ದಾರೆ.
ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಕಾಂಗ್ರೆಸ್ ಮುಖಂಡ ಡಾ.ಡಿ.ಎಲ್.ವಿಜಯಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್, ಹಿರಿಯ ಜಾನಪದ ಕಲಾವಿದೆ ಮುಗುಳಿ ಲಕ್ಷ್ಮೀ ದೇವಮ್ಮ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸಮ್ಮೇಳನಕ್ಕೆ ಮುನ್ನ ವಿವಿಧ ಜಾನಪದ ಕಲಾತಂಡಗಳ ನಡುವೆ ತಾಲೂಕು ಕಚೇರಿ ಆವರಣದಿಂದ ಕಲಾಮಂದಿರದವರೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಅದ್ದೂರಿಯಾಗಿ ನಡೆಸಲಾಗುವುದು ಎಂದು ಕ.ಜಾ.ಪ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ತಿಳಿಸಿದ್ದಾರೆ.
ಮಧ್ಯಾಹ್ನ 1:30ಕ್ಕೆ ಜಾನಪದ ಗೋಷ್ಠಿ, ಡಾ. ಅಪ್ಪುಗೆರೆ ತಿಮ್ಮರಾಜು ಅವರಿಂದ ಜಾನಪದ ಗೀತೆಗಳ ಗಾಯನ, ಕನ್ನಡ ಪೂಜಾರಿ ಹಿರೇಮಗಳೂರು ಕಣ್ಣನ್ ಅವರಿಂದ ಉಪನ್ಯಾಸ, ಗೀತ ಮಾಧುರ್ಯ ಕಾರ್ಯಕ್ರಮ, ಮಧ್ಯಾಹ್ನ 3:30ಕ್ಕೆ ಸಮಾರೋಪ ಸಮಾರಂಭ, ಸಂಜೆ 6 ಗಂಟೆಗೆ ಸಾಂಸ್ಕೃತಿಕ ಕಲಾವೈಭವ ಜರುಗಲಿದೆ ಎಂದು ಹೇಳಿದ್ದಾರೆ.










