ನವದೆಹಲಿ : ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾದ ಮಧ್ಯೆ ಇದೀಗ ಬಂಡಾಯ ಶಾಸಕರ(ಶಿವಸೇನೆ) ಗುಂಪು ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
16 ಶಾಸಕರಿಗೆ ಉಪಸಭಾಪತಿ ಹೊರಡಿಸಿದ್ದ ಅನರ್ಹತೆಯ ನೋಟಿಸ್ ಪ್ರಶ್ನಿಸಿ ಶಿಂದೆ ಬಣ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಇಂದು ಬೆಳಗ್ಗೆ 10.30ಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸಲಿದೆ.
ಶಿಂದೆ ಬಂಡಾಯ ಸಾರಿರುವ ಹಿನ್ನೆಲೆಯಲ್ಲಿ ಅವರನ್ನು ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾಗೊಳಿಸಿ, ಈ ಸ್ಥಾನಕ್ಕೆ ಅಜಯ್ ಚೌಧರಿ ಅವರನ್ನು ನೇಮಿಸಲಾಗಿದೆ. ವಿಧಾನಸಭೆ ಉಪ ಸ್ಪೀಕರ್ ನರಹರಿ ಜಿರ್ವಾಲ್ ಅವರು 16 ಬಂಡಾಯ ಶಾಸಕರಿಗೆ ನೋಟಿಸ್ ಜಾರಿ ಮಾಡಿದ್ದು, ಇಂದು ಸಂಜೆ 5 ಗಂಟೆಯೊಳಗೆ ಉತ್ತರ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರ ವಿರುದ್ಧ ಶಿಂದೆ ಗುಂಪು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿದೆ.
ಬಂಡಾಯಗಾರರ ಗುಂಪಿನ ಏಕನಾಥ್ ಶಿಂಧೆ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ಇಂದು ವಾದ ಮಂಡನೆ ಮಾಡಲಿದ್ದಾರೆ. ಇನ್ನೊಂದೆಡೆ ಶಿವಸೇನೆಯ ಪರವಾಗಿ ಹಿರಿಯ ನ್ಯಾಯವಾದಿಗಳಾದ ಕಪಿಲ್ ಸಿಬಲ್ ಮತ್ತು ದೇವದತ್ತ ಕಾಮತ್ ವಕಾಲತ್ತು ವಹಿಸಲಿದ್ದಾರೆ. ಇಂದಿನ ಸುಪ್ರೀಂ ಕೋರ್ಟ್ ವಿಚಾರಣೆ ಭಾರೀ ಕುತೂಹಲ ಮೂಡಿಸಿದೆ.










