ತಿರುವನಂತಪುರ(ಕೇರಳ): ವಿಶ್ವಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇಂದಿನಿಂದ ಭಕ್ತರ ದರ್ಶನಕ್ಕಾಗಿ ಓಪನ್ ಆಗಿದ್ದು, ಜುಲೈ 21ರವರೆಗೆ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯಬಹುದಾಗಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡಿರುವ ಪ್ರಮಾಣ ಪತ್ರ ಹಾಗೂ ಆರ್ಟಿ-ಪಿಸಿಆರ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ಹೊಂದಿರಬೇಕು ಎಂದು ತಿಳಿಸಲಾಗಿದೆ. ಪ್ರತಿದಿನ 5 ಸಾವಿರ ಭಕ್ತರು ಇಲ್ಲಿಗೆ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದ್ದು, ಆನ್ ಲೈನ್ ಬುಕ್ಕಿಂಗ್ ಗೆ ಅವಕಾಶ ನೀಡಲಾಗಿದೆ.
ದೇಗುಲದ ಆವರಣದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರ ಕಡ್ಡಾಯವಾಗಿದೆ. ಕೇರಳದಲ್ಲಿ ಕೊರೊನಾ ಹೆಚ್ಚಾಗಿದ್ದ ಹಿನ್ನಲೆ ಕಳೆದ ಕೆಲ ತಿಂಗಳಿಂದ ಅಯ್ಯಪ್ಪನ ದೇವಸ್ಥಾನ ಸಂಪೂರ್ಣವಾಗಿ ಬಂದ್ ಆಗಿದ್ದು, ಅಲ್ಲಿನ ಅರ್ಚಕರು ಪೂಜೆ ನಡೆಸುತ್ತಿದ್ದಾರೆ. ಇದೀಗ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ಇಂದು ಮತ್ತು ನಾಳೆ ಕೂಡ ಅಯ್ಯಪ್ಪ ದರ್ಶನಕ್ಕೆ ಅವಕಾಶ ನೀಡಲಾಗಿದೆ.










