ಮೈಸೂರು: ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೆÇಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆ.ಎಸ್ ರಾಜಣ್ಣ ಹೇಳಿಕೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಜಣ್ಣ ಅವರ ಮಾತಿಗೆ ಮುಖ್ಯಮಂತ್ರಿಗಳು ಉತ್ತರ ಕೊಡುತ್ತಾರೆ. 8, 10 ದಿನದಲ್ಲಿ ಸಿಎಂ ಸಿದ್ದರಾಮಯ್ಯನವರೇ ಪ್ರತಿಕ್ರಿಯೆ ಕೊಡುತ್ತಾರೆ. ಮೈಸೂರಿನ ನೆಲದಲ್ಲಿ ನಿಂತು ಹೇಳುತ್ತಿದ್ದೇನೆ, ಪೊಲೀಸರದ್ದು ತಪ್ಪಿಲ್ಲ. ಎಲ್ಲಾ ಮಾಹಿತಿ ಪಡೆದಿದ್ದೇನೆ, ಪೊಲೀಸರು ಅನಾಹುತ ತಪ್ಪಿಸಿದ್ದಾರೆ ಎಂದು ಹೇಳಿದರು. ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗಾದರೆ ಪ್ರೊಟೆಕ್ಷನ್ ಇತ್ತು, ಅಲ್ಲಿದ್ದ ಜನರಿಗೆ ಇರಲಿಲ್ಲ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದು ಹೇಳಿದರು.










