ನವದೆಹಲಿ : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಖಾಸಗಿ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲು ಮುಖ್ಯ ನ್ಯಾಯಧೀಶ ಎನ್ವಿ ರಮಣ ಅವರು ಒಪ್ಪಿಗೆ ಸೂಚಿಸಿದ್ದಾರೆ.
ಕನಕರಾಜು ಎಂಬುವವರು ಖಾಸಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿದಾರರು ತಮಗೆ ಲಂಚ ಬೇಡಿಕೆ ಇಟ್ಟಿದ್ದ ಬೆಸ್ಕಾಂ ವಿಚಕ್ಷಣಾ ದಳ ಠಾಣೆಯ ಇಬ್ಬರು ಅಧಿಕಾರಿಗಳ ವಿರುದ್ಧ ದೂರು ನೀಡಿದ್ದರು. ಆದರೆ ಈ ಮಧ್ಯೆ ಎಸಿಬಿಯನ್ನು ರದ್ದುಗೊಳಿಸಿದ್ದ ಹೈಕೋರ್ಟ್ ಎಲ್ಲ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ವರ್ಗಾಯಿಸಿತ್ತು.
ಈ ಹಂತದಲ್ಲಿ ಎಸಿಬಿಯನ್ನು ರದ್ದು ಮಾಡಿರುವುದು ತಪ್ಪು. ಕೇಸುಗಳ ತನಿಖೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.










