ಲಕ್ನೋ : ಉತ್ತರ ಪ್ರದೇಶದ ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿವೊಂದರ ಕಟ್ಟಡದ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ ದುರ್ಘಟನೆ ನಡೆದಿದೆ. ನೋಯ್ಡಾ ಸೆಕ್ಟರ್-21ರಲ್ಲಿ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಗೋಸ್ಕರ ನೋಯ್ಡಾ ಪ್ರಾಧಿಕಾರ ಗುತ್ತಿಗೆ ನೀಡಿತ್ತು. ಕಾರ್ಮಿಕರು ಇಟ್ಟಿಗೆಗಳನ್ನು ಹೊರ ತೆಗೆಯುವಾಗ, ಗೋಡೆ ಕುಸಿದಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಕೆಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.










