ನವದೆಹಲಿ : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರುಳೀಧರ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷ ಮುರುಗನ್ ಅವರ ನೇತೃತ್ವದಲ್ಲಿ ಅಣ್ಣಾಮಲೈ ಅವರು ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ. ಬಳಿಕ ಮಾತನಾಡಿದ ಅಣ್ಣಾಮಲೈ ಅವರು ನಾನು ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವನ್ನು ಮೆಚ್ಚಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ತಮಿಳುನಾಡು ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ಇದರಿಂದ ಸಮಾಜ ಸೇವೆ ಮಾಡಲು ನಾನು ಬಿಜೆಪಿಗೆ ಸೇರಿದ್ದೇನೆ. ನಿಷ್ಠೆಯಿಂದ ಯೋಧನಾಗಿ ಬಿಜೆಪಿಗೆ ದುಡಿಯುತ್ತೇನೆ. ಪೊಲೀಸ್ ಕರ್ತವ್ಯದಲ್ಲಿದ್ದಾಗ ಪೊಲೀಸ್ ಧರ್ಮ ನನ್ನದಾಗಿತ್ತು. ಎಲ್ಲಾ ಧರ್ಮದವರೂ ನನಗೆ ಸ್ನೇಹಿತರಾಗಿದ್ದಾರೆ. ಬಿಜೆಪಿ ಸೇರಿದ ಮೇಲೆ ಬಿಜೆಪಿ ಸಿದ್ಧಾಂತಕ್ಕೆ ಬದ್ಧ ಎಂದು ಹೇಳಿದ್ದಾರೆ.










