ಬೆಂಗಳೂರು : ಸರಣಿ ಟ್ವೀಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಕರ್ನಾಟಕಕ್ಕೆ ನಿತ್ಯ 1200 ಮೆಟ್ರಿಕ್ ಟನ್(MT) ಆಮ್ಲಜನಕ ಪೂರೈಸಬೇಕು ಎಂಬ ಕೋರ್ಟ್ ಆದೇಶದ ನಂತರವೂ ಕೇಂದ್ರ ರಾಜ್ಯಕ್ಕೆ ಪೂರೈಸಿದ್ದು 120 ಮೆಟ್ರಿಕ್ ಟನ್ ಮಾತ್ರ. ಅತ್ತ, ನಮಗಿಂತ ಕಡಿಮೆ ಪ್ರಕರಣಗಳಿರುವ ಉತ್ತರ ಪ್ರದೇಶಕ್ಕೆ 1680MT ಪೂರೈಸಿರುವ ಕೇಂದ್ರ ಸರ್ಕಾರ ತಾರತಮ್ಯದಲ್ಲಿ ಪಾರಮ್ಯ ಮೆರೆದಿದೆ. ಈ ಒಕ್ಕೂಟದಲ್ಲಿ ಕನ್ನಡಿಗರೇನು ತಬ್ಬಲಿ ಮಕ್ಕಳೇ? ಎಂದು ಪ್ರಶ್ನಿಸಿದ್ದಾರೆ.
ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ-ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?. ಕರ್ನಾಟಕದ ವಿಚಾರದಲ್ಲಿ ಹೇಳತೀರದ ತಾರತಮ್ಯ ಮಾಡುತ್ತಿರುವ ಕೇಂದ್ರ ಸರ್ಕಾರ ಒಂದು ವಿಷಯ ಸ್ಪಷ್ಟವಾಗಿ ಅರಿಯಬೇಕು. ಇದು ಒಕ್ಕೂಟ ವ್ಯವಸ್ಥೆ. ಒಕ್ಕೂಟ ಸರ್ಕಾರ ನಡೆಸುತ್ತಿರುವವರು ಎಲ್ಲ ರಾಜ್ಯಗಳಿಗೂ ಸಮಾನ ಆದ್ಯತೆ ನೀಡಬೇಕು. ಅನಿವಾರ್ಯದಲ್ಲಿರುವವರ ಅಗತ್ಯಗಳನ್ನು ಮೊದಲು ಪೂರೈಸಬೇಕು. ಅದನ್ನು ಬಿಟ್ಟು ತಾತ್ಸಾರ ಮಾಡಿದರೆ ಜನ ದಂಗೆ ಎದ್ದಾರು ಎಂದಿದ್ದಾರೆ.
ನ್ಯಾಯಾಲಯ ಹೇಳಿದ್ದ 1200MT ಬದಲಿಗೆ 120MT ಆಮ್ಲಜನಕ ಪೂರೈಸಿದ್ದಕ್ಕೆ ಮುಖ್ಯಮಂತ್ರಿ, ಕೇಂದ್ರದ ಸಚಿವರು, ಬಿಜೆಪಿ ಸಂಸದರು ಮುಗಿಬಿದ್ದು ಕೇಂದ್ರ, ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ನಮಗೆ ಸಿಗಬೇಕಾಗಿದ್ದರಲ್ಲಿ ಮುರಿದುಕೊಂಡು ಕೊಟ್ಟದ್ದಕ್ಕೆ ಧನ್ಯವಾದ ಏಕೆ? ಬಿಜೆಪಿ ನಾಯಕರು, ಬಿಜೆಪಿ ಬೆಂಬಲಿಗರು ಈ ಗುಲಾಮಗಿರಿ ಬಿಡಬೇಕು ಎಂದರು.
ಕೇಂದ್ರ ಸರ್ಕಾರ ತಾರತಮ್ಯ ಬಿಟ್ಟು ಕರ್ನಾಟಕದ ಅಗತ್ಯವನ್ನು ಪೂರೈಸಬೇಕು. ತಾನು ಸರ್ವಶಕ್ತ ಆಡಳಿತ ನಡೆಸುತ್ತಿರುವ ಧಿಮಾಕನ್ನು ಕೇಂದ್ರ ಬಿಡಬೇಕು. ಒಕ್ಕೂಟ ಸರ್ಕಾರ ನಡೆಸುತ್ತಿರುವ ವಾಸ್ತವ ಅರಿಯಬೇಕು. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷದ ತಪ್ಪನ್ನು ಇಲ್ಲಿ ಸಮರ್ಥಿಸಿಕೊಳ್ಳುತ್ತಿರುವವರು ಮೊದಲು ತಾವು ಕನ್ನಡಿಗರು ಎಂಬುದನ್ನು ಅರಿಯಬೇಕು. ಆಮ್ಲಜನಕ ಕರ್ನಾಟಕದ ಈ ಹೊತ್ತಿನ ಅಗತ್ಯ. ಈ ವಿಚಾರದಲ್ಲಿ ಆಗುತ್ತಿರುವ ತಾರತಮ್ಯವನ್ನೇ ಕನ್ನಡಿಗರಾಗಿ ನಾವು ಪ್ರಶ್ನೆ ಮಾಡದೇ ಹೋದರೆ ಇನ್ಯಾವ ವಿಚಾರದಲ್ಲಿ ನಾವು ನ್ಯಾಯ ಪಡೆಯಲು ಸಾಧ್ಯ. ಪರಿಹಾರ, ಅನುದಾನಗಳಲ್ಲಿ ಕರ್ನಾಟಕಕ್ಕೆ ಈಗ ಆಗಿರುವ ಅನ್ಯಾಯ ಸಹಿಸಿದ್ದಾಗಿದೆ. ಜೀವದ ವಿಚಾರದಲ್ಲಿ ನಡೆಯುತ್ತಿರುವ ಈ ತಾರತಮ್ಯ ಸಹಿಸುವುದು ಬೇಡ ಎಂದಿದ್ದಾರೆ.
ಕರ್ನಾಟಕದ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿರುವುದು ಸರ್ಕಾರವೇ ನೀಡಿರುವ ಅಂಕಿ ಅಂಶಗಳಿಂದ ಬಯಲಾಗಿದೆ. ಕರ್ನಾಟಕ, ಕನ್ನಡಿಗರ ವಿಚಾರದಲ್ಲಿ ಕೇಂದ್ರಕ್ಕೆ ಈ ಮಟ್ಟಿಗಿನ ತಾತ್ಸಾರ ಏಕೆ? ಇಲ್ಲಿ ಬಿಜೆಪಿಯದ್ದೇ ಸರ್ಕಾರ ಇರುವುದಕ್ಕೋ? ಅತಿ ಹೆಚ್ಚು ಸಂಸದರು ಆಯ್ಕೆಯಾಗಿರುವುದಕ್ಕೋ? ಅಥವಾ ಯಡಿಯೂರಪ್ಪರನ್ನು ಖಳನಾಯಕರಾಗಿಸಲೋ?
2/8— H D Kumaraswamy (@hd_kumaraswamy) May 13, 2021










