ಬೆಂಗಳೂರು : ಇಂದು ಐಕ್ಯತಾ ಓಟಕ್ಕೆ ಚಾಲನೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಮಾಧ್ಯಮದವರೊಂದಿಗೆ ಮಾತನಾಡಿ ನಿನ್ನೆ ಸಚಿವರು 120 ಜನ ರೈತರಿಗೆ ನೋಟಿಸ್ ಕೊಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ. ಅದಕ್ಕೆ ಬಿಜೆಪಿ ಹೊಣೆಯೇ? ಅದಕ್ಕೆ ಬಿಜೆಪಿ ಕಾರಣವೇ ಎಂದು ಕೇಳಿದರು. ಇದನ್ನು ಬಿಜೆಪಿ ಗಟ್ಟಿಯಾಗಿ ತೆಗೆದುಕೊಳ್ಳದೇ ಇದ್ದರೆ ರಾಜ್ಯ ಸರ್ಕಾರದ ಕ್ರಮದಿಂದ ನೂರಾರು ವರ್ಷಗಳಿಂದ ಉಳುಮೆ ಮಾಡುತ್ತಿದ್ದ ರೈತರು ಬೀದಿಗೆ ಬರಬೇಕಾಗುತ್ತಿತ್ತು ಎಂದರು. ತಲ ತಲಾಂತರದಿಂದ ಇದ್ದ ಪಿತ್ರಾರ್ಜಿತ ಆಸ್ತಿಯನ್ನು ರಾತ್ರೋರಾತ್ರಿ ವಕ್ಫ್ ಪ್ರಾಪರ್ಟಿ ಎಂದು ಘೋಷಿಸಿದರೆ, ರೈತರು ಬೀದಿಗೆ ಬಂದು ಏನು ಮಾಡಬೇಕು? ಎಂದು ಪ್ರಶ್ನಿಸಿದರು. ನಾವಿದರ ವಿರುದ್ಧ ಹೋರಾಟ ಮಾಡುತ್ತೇವೆ, ರೈತರಿಗೆ ಧ್ವನಿಗೂಡಿಸುತ್ತೇವೆ, ಅವರ ಬೆಂಬಲಕ್ಕೆ ನಿಲ್ಲುವುದಾಗಿ ಹೇಳಿದರೆ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ನಮ್ಮ ಮೇಲೆ ಆರೋಪ ಮಾಡುತ್ತಾರೆ ಎಂದು ಟೀಕಿಸಿದರು.
ಅಲ್ಪಸಂಖ್ಯಾತರನ್ನು ಎತ್ತಿಕಟ್ಟುವ, ಈ ದೇಶವನ್ನು ಜಾತಿ, ಧರ್ಮದ ಆಧಾರದಲ್ಲಿ ವಿಭಜಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಹಿಂದಿನಿಂದಲೂ ಮಾಡುತ್ತಾ ಬಂದಿದೆ. ಅದೇ ನಿಟ್ಟಿನಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಇವತ್ತು ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ. ವೈ ವಿಜಯೇಂದ್ರ ಆರೋಪಿಸಿದ್ದಾರೆ.










