ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕೊಲೆ ಬೆದರಿಕೆ ಬಂದಿರುವ ವಿಷಯಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. “ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಭಯದ ವಾತಾವರಣ ಸೃಷ್ಟಿಸಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಗೊಳಿಸುವ ಯಾವುದೇ ಶಕ್ತಿಗಳಾದರೂ ಸರಿ ಅಂಥವರಿಗೆ ತಕ್ಕ ಶಿಕ್ಷೆಯಾಗಲೇಬೇಕು. ಮೈಸೂರಿನಲ್ಲಿ ‘Free Kashmir’ ಫಲಕ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ನನ್ನ ಲೈಸೆನ್ಸ್ ಅನ್ನು ಹಿಂದೆ ಅಮಾನತು ಮಾಡಿದ್ದರು. ಅಮಾನತು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದೇನೆ. ಯುವತಿಯ ಪರ ಯಾರೇ ವಕಾಲತ್ತು ವಹಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಈ ಬಗ್ಗೆ ಗೊಂದಲ ಬೇಡ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಸ್ವಾತಂತ್ರ್ಯ ನಂತರ ಸಂಸತ್ನಲ್ಲಿ ಸಂವಿಧಾನ ಮಂಡನೆಯಾದಾಗ ಆಗಿನ ಜನಸಂಘ ಅದನ್ನು ವಿರೋಧಿಸಿತ್ತು. ಆರ್ಎಸ್ಎಸ್ ಮತ್ತು ಜನಸಂಘಗಳು ಸಂವಿಧಾನದ ಮೇಲೆ ನಂಬಿಕೆಯಿಟ್ಟವರಲ್ಲ. ಅವರಿಗೆ ಮನುವಾದ, ಮನುಸ್ಮೃತಿ ಮೇಲಷ್ಟೇ ನಂಬಿಕೆ. ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ ಮಾಡಿ, ಬಿಜೆಪಿ ಸೇರಿ ಚುನಾವಣೆಯಲ್ಲಿ ಸೋತು, ಅತ್ತ ಸಚಿವ ಸ್ಥಾನವೂ ಸಿಗದೆ, ಇತ್ತ ಶಾಸಕರೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿರುವವರಿಗೆ ತಕ್ಕ ಶಿಕ್ಷೆಯಾಗುತ್ತಿದೆ. ಇದು ನ್ಯಾಯಕ್ಕೆ ಸಂದ ಜಯ” ಎಂದು ಟ್ವೀಟ್ ಮಾಡಿದ್ದಾರೆ.










